Muhurat for Niranjan-Rachna duo's new film "Spark"

ನಿರಂಜನ್- ರಚನಾ ಜೋಡಿಯ ಹೊಸ ಚಿತ್ರ “ಸ್ಪಾರ್ಕ್”ಗೆ ಮುಹೂರ್ತ - CineNewsKannada.com

ನಿರಂಜನ್- ರಚನಾ ಜೋಡಿಯ ಹೊಸ ಚಿತ್ರ “ಸ್ಪಾರ್ಕ್”ಗೆ ಮುಹೂರ್ತ

ಸ್ಯಾಂಡಲ್‍ವುಡ್‍ನ ಭರವಸೆಯ ನಾಯಕ ನಟರಾಗುವ ನಿರೀಕ್ಷೆ ಹುಟ್ಟಿಸಿರುವ ನಟ, ನಿದೇಶಕ ಉಪೇಂದ್ರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೊಸ ಸಿನಿಮಾ “ಸ್ಪಾರ್ಕ್” ಸೆಟ್ಟೇರಿದೆ.

ಜೇಮ್ಸ್, ಭರಾಟೆ, ಕನಕ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ದುಡಿದಿರುವ ಡಿ.ಮಹಾಂತೇಶ್ ಹಂದ್ರಾಳ್ ನಿರ್ದೇಶರಾಗಿ ಬಡ್ತಿ ಪಡೆದಿದ್ದಾರೆ. ಚೇತನ್ ಕುಮಾರ್, ಆರ್.ಚಂದ್ರು ಅವರ ಗರಡಿಯಲ್ಲಿ ನಿರ್ದೇಶನದ ಪಟುಗಳನ್ನು ಕಲಿತಿರುವ ಮಹಾಂತೇಶ್ ಈಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಅವರ ಚೊಚ್ಚಲ ಪ್ರಯತ್ನದಲ್ಲಿ ನಾಯಕನಾಗಿ ನಿರಂಜನ್ ಸುಧೀಂದ್ರ ಅಭಿನಯಿಸುತ್ತಿದ್ದಾರೆ.

ಡಿ.ಮಹಾಂತೇಶ್ ಹಂದ್ರಾಳ್ ಆಕ್ಷನ್ ಥ್ರಿಲ್ಲರ್ ಕಥೆಂ ಎಣೆದಿದ್ದಾರೆ. ನೈಜ ಘಟನೆಯಿಂದ ಸ್ಫೂರ್ತಿ ಪಡೆದಿರುವ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ನಿರ್ಮಾಪಕರ ಆಗಮನವಾಗುತ್ತಿದೆ. ಮಹಾಂತೇಶ್ ವಿಷನ್ ಗೆ ಡಾ.ಗರಿಮಾ ಅವಿನಾಶ್ ವಸಿಷ್ಠ ಸಾಥ್ ಕೊಡುತ್ತಿದ್ದಾರೆ ಸಾಫ್ಟ್ ವೆರ್ ಉದ್ಯೋಗಿಯಾಗಿರುವ ಅವಿನಾಶ್, ಗರಿಮಾ ಅವಿನಾಶ್ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದ್ದಾರೆ. ನಿರ್ಮಾಣ ಸಂಸ್ಥೆ ಪ್ರಪ್ರಥಮ ಸಿನಿಮಾವನ್ನು ನಿರಂಜನ್ ಸುಧೀಂದ್ರಗೆ ಮಾಡುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಸಾಥ್ ಕೊಡುತ್ತಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಸ್ಪಾರ್ಕ್ ಚಿತ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕ್ಲ್ಯಾಪ್ ಮಾಡಿದರು. ಉದ್ಯಮಿ ಅಂಕಿತಾ ವಸಿಷ್ಠ ಕ್ಯಾಮೆರಾಗೆ ಚಾಲನೆ ಕೊಟ್ಟರು. ಡಾರ್ಲಿಂಗ್ ಕೃಷ್ಣ , ಮಿಲನಾ ನಾಗರಾಜ್ ಹಾಗೂ ನವೀನ್ ಶಂಕರ್ ವಿಶೇಷ ಅತಿಥಿಯಾಗಿ ಚಿತ್ರಕ್ಕೆ ಶುಭ ಹಾರೈಸಿದರು.

ಮಹೂರ್ತದ ಬಳಿಕ ಚಿತ್ರತಂಡ ಮಾತಿಗೆ ಕುಳಿತುಕೊಂಡಿತು. ಈ ವೇಳೆ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಮಾತನಾಡಿ, ಸ್ಪಾರ್ಕ್ ನನ್ನ ಮೊದಲ ಸಿನಿಮಾ. ಇದೇ ತಿಂಗಳಾಂತ್ಯಕ್ಕೆ ಶೂಟಿಂಗ್ ಹೋಗುತ್ತಿದ್ದೇವೆ. ಬಹುತೇಕ ಶೂಟಿಂಗ್ ಬೆಂಗಳೂರಿನಲ್ಲಿಯೇ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡರು

ನಟ ನಿರಂಜನ್ ಸುಧೀಂದ್ರ ಮಾತನಾಡಿ, ಸ್ಪಾರ್ಕ್ ಅಂದರೆ ಪ್ರೆಸ್. ಅವರಿಗೆ ಇರುವ ಸ್ಪಾರ್ಕ್ ಇನ್ಯಾರಿಗೂ ಇರುವುದಿಲ್ಲ. ಯಾವುದೇ ವಿಷಯದ ಬಗ್ಗೆ ಮೊದಲು ಕಿಡಿ ಹತ್ತಿಸುವವರು ಅವರೇ. ನಮ್ಮ ಕಥೆಯಲ್ಲಿ ಚಿಕ್ಕ ಕಿಡಿ ಇದೆ. ಅದನ್ನು ಸ್ಪಾರ್ಕ್ ಚಿತ್ರದ ಮೂಲಕ ಅದ್ಭುತವಾಗಿ ಹೇಳಲು ಹೊರಟ್ಟಿದ್ದಾರೆ. ಸಿನಿಮಾದಲ್ಲಿ ನಾನು ಅಭಿರಾಮ್ ಎಂಬ ಜರ್ನಲಿಸ್ಟ್ ಪಾತ್ರ ಮಾಡುತ್ತಿದ್ದೇನೆ. ಈ ಚಿತ್ರಕ್ಕೆ ಇಬ್ಬರು ನಿರ್ಮಾಪಕರು ಸಾಥ್ ಕೊಟ್ಟಿದ್ದಾರೆ. ಸ್ಪಾರ್ಕ್ ಸಿನಿಮಾದ ಭಾಗವಾಗುತ್ತಿರುವುದು ಖುಷಿ ಕೊಟ್ಟಿದೆ ಎಂದರು.

ನಿರ್ಮಾಪಕಿ ಗರಿಮಾ ಮಾತನಾಡಿ, ಕನಸು ನನಸಾಗಿದೆ. ಬಹಳ ಖುಷಿಯಾಗುತ್ತಿದೆ. ಮ್ಯೂಸಿಕ್ ಆಲ್ಬಂ ಮಾಡಬೇಕು ಎಂದುಕೊಂಡಿದ್ದೇನೆ ಎಂದಾಗ ನನ್ನ ಕುಟುಂಬ ಸಿನಿಮಾ ಮಾಡೋಲ್ವಾ ಎಂದರು. ಕುಟುಂಬದ ಬೆಂಬಲದಿಂದ ಮೊದಲ ಚಿತ್ರ ಮಾಡುತ್ತಿದ್ದೇನೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡರು.

ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಮಧು ಸಂಕಲನ ಈ ಚಿತ್ರಕ್ಕಿದೆ. ಈ ತಿಂಗಳಾಂತ್ಯಕ್ಕೆ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದ್ದು , ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin