ವೀರಗಾಸೆ ಕಲಾವಿದನ ಪಾತ್ರಲ್ಲಿ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹೊಸ ಲುಕ್
“ವೀರಗಾಸೆ ಕಲಾವಿದನ ವೇಷದಲ್ಲಿ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ‘ರುದ್ರ’ನಾಗಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ತಾವು ಎಲ್ಲಾ ರೀತಿಯ ಪಾತ್ರಕ್ಕೆ ಸಲ್ಲುವ ಕಲಾವಿದ ಎನ್ನುವುದನ್ನು ಮತ್ತೊಮ್ಮೆ ನಿರೂಪಿಸಿದ್ಧಾರೆ.

ವಿಜಯ್ ರಾಘವೇಂದ್ರ ನಟಿಸುತ್ತಿರುವ ‘ರುದ್ರಾಭಿಷೇಕಂ’ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ನೂರಾರು ವೀರಗಾಸೆ ಕಲಾವಿದರು ಭಾಗಿಯಾಗಿದ್ದರು. ಕರಾವಳಿ ಭಾಗದ ದೈವಾರಾಧನೆ, ಆಚರಣೆ ಬಗ್ಗೆ ಹೇಳಲಾಗಿತ್ತು. ಅದೇರೀತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿರುವ ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ಚಿತ್ರ ಇದಾಗಿದೆ.
“ರುದ್ರಾಭಿಷೇಕಂ” ಚಿತ್ರ ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ನಿರ್ದೇಶಕ ವಸಂತ್ ಕುಮಾರ್ ರುದ್ರಾಭಿಷೇಕಂ ಚಿತ್ರದಲ್ಲಿ ಹೇಳ ಹೊರಟಿದ್ದಾರೆ.
ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಸೀನ್ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ವೀರಗಾಸೆ ಕಲಾವಿದರನ್ನಿಟ್ಟುಕೊಂಡು ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗುತ್ತಿದೆ.
ನಿರ್ದೇಶಕ ವಸಂತಕುಮಾರ್ ಮಾತನಾಡಿ ಫ್ಯಾನ್ ಇಂಡಿಯಾ ಸಂಸ್ಥೆಯ ಮೊದಲ ಚಿತ್ರವಿದು. ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆ ಚಿತ್ರ ಕೊಡಬೇಕೆಂದು 9 ಜನ ನಿರ್ಮಾಪಕರುಗಳು ಸೇರಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೇವೆ. ಕಳೆದ 45 ದಿನಗಳಿಂದ ಯಾವುದೇ ತೊಂದರೆ ಇಲ್ಲದ ಹಾಗೆ ನಿರಂತರ ಚಿತ್ರೀಕರಣ ನಡೆದಿದ್ದು, 4 ದಿನಗಳ ಕ್ಲೈಮ್ಯಾಕ್ಸ್ ಸಾಂಗ್ ಮಾತ್ರವೇ ಬಾಕಿಯಿದೆ. ಶೂಟಿಂಗ್ ಜತೆ ಜತೆಗೆ ಎಡಿಟಿಂಗ್ ಕೂಡ ಶೇಕಡಾ 90ರಷ್ಟು ಮುಗಿದಿದ್ದು, ಡಬ್ಬಿಂಗ್ ವರ್ಷನ್ ಸಿದ್ದವಿದೆ ಎಂದರು.
ನಿರ್ಮಾಪಕರ ಹಾಗೂ ಕಲಾವಿದರೆಲ್ಲರ ಸಹಕಾರದಿಂದ ಯಾವುದೇ ತೊಂದರೆಯಿಲ್ಲದೆ ಚಿತ್ರೀಕರಣ ನಡೆದಿದೆ. ಈಗ ನಡೆಯುತ್ತಿರುವ ಕ್ಲೈಮ್ಯಾಕ್ಸ್ ಹಾಡೇ ಚಿತ್ರದ ಹೈಲೈಟ್. ನೂರಾರು ಜನ ವೀರಗಾಸೆ ಕಲಾವಿದರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಇನ್ನುಮುಂದೆ ವೀರಗಾಸೆ ಕಲಾವಿದರು ಎಲ್ಲೇ ನೃತ್ಯ ಮಾಡಿರೂ ಈ ಹಾಡನ್ನಿಟ್ಟುಕೊಂಡು ವೀರಗಾಸೆ ಕುಣಿತ ನಡೆಸಬೇಕು, ಹಾಗಿದೆ ಹಾಡು. ದೈವದ ಹಿನ್ನೆಲೆ ಇರುವ ಈ ಜನಪದ ಕಲೆಯನ್ನು ನಾಡಿನ ಮನೆ ಮನೆಗೂ ತಲುಪಿಸಬೇಕು ಎನ್ನುವುದೇ ನಮ್ಮ ಉದ್ದೇಶ. ನಾಯಕ ವಿಜಯ ರಾಘವೇಂದ್ರ ಕೂಡ ನಮಗೆ ತುಂಬಾ ಸಹಕಾರ ಕೊಟ್ಟಿದ್ದಾರೆ. ತಂಡದ ಜತೆ ಸ್ನೇಹಿತನಂತೆ ಬೆರೆತು ಕೈಜೋಡಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಚಿತ್ರದಲ್ಲಿ ನಾನೂ ಒಬ್ಬ ತತ್ವಜ್ಞಾನಿಯಾಗಿ ನಟಿಸಿದ್ದೇನೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವಂಥ ನನ್ನ ಪಾತ್ರಕ್ಕೆ ಎರಡು ಗೆಟಪ್ ಇದೆ. ಜೂನ್ ಅಥವಾ ಜುಲೈ ಚಿತ್ರವನ್ನು ವೇಳೆಗೆ ರಿಲೀಸ್ ಮಾಡುವ ಪ್ಲಾನಿದೆ ಎಂದು ಹೇಳಿದರು.

ತಂದೆ, ಮಗನಾಗಿ ದ್ವಿಪಾತ್ರದಲ್ಲಿ ನಟಿಸಿರುವ ವಿಜಯ ರಾಘವೇಂದ್ರ ಇದೇ ಮೊದಲ ಬಾರಿಗೆ ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.
ಚಿತ್ರಕ್ಕೆ ದೇವನಹಳ್ಳಿ ಸುತ್ತಮುತ್ತ ಹಾಗೂ ಕರಾವಳಿಯ ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೋರ್ಟ್ ಅಲ್ಲದೆ ಅಘನಾಶಿನಿ ಹಿನ್ನೀರಿನ, ಈವರೆಗೆ ಯಾರೂ ಶೂಟ್ ಮಾಡದಂಥ ಲೊಕೇಶನ್ ನಲ್ಲಿ 2 ಹಾಡುಗಳನ್ನು ಚಿತ್ರೀಕರಿಸಲಾಗಿದೆ.
ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ವೀರಗಾಸೆ ಕಲೆಯ ಮಹತ್ವ, ಇತಿಹಾಸವನ್ನು ಈ ಚಿತ್ರದಲ್ಲಿ ಹೇಳಲಾಗಿದೆ.ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರ ಹೇಳುತ್ತದೆ.
ಮಂಜುನಾಥ ಕೆ.ಎನ್, ಜಯರಾಮ್ ರೆಡ್ಡಿ, ಕೆ.ವೆಂಕಟೇಶ್, ಚಿದಾನಂದ ಮೂರ್ತಿ, ಸುರೇಶ್ ಬಾಬು, ಅಶ್ವಥ್ ನಾರಾಯಣ, ಶಿವಕುಮಾರ್, ರವಿಕುಮಾರ್ ಸೇರಿ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ರುದ್ರಾಭಿಷೇಕಂ ಚಿತ್ರದಲ್ಲಿ ಬಲ ರಾಜವಾಡಿ ಊರ ಗೌಡನಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಅವರ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಚಿತ್ರಕ್ಕಿದೆ.

