ವಿಶಿಷ್ಟ ಕಥಾ ಹಂದರದ ಮಕ್ಕಳ ಚಿತ್ರ `ಸೀಸ್ ಕಡ್ಡಿ’ ಬಿಡುಗಡೆಗೆ ಸಜ್ಜು
ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿತ್ರಗಳ ಸಂಖ್ಯೆ ಕಡಿಮೆಯಾಗಿದೆ ಅನ್ನುವ ಮಾತು ಆಗಾಗ ಕೇಳಿ ಬರುತ್ತಿದೆ. ವಿಶಿಷ್ಟ ಕಥಾನಕದ ಮಕ್ಕಳ ಚಿತ್ರವೊಂದು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಸದ್ದು ಮಾಡಿದೆ. ಇನ್ನೇನು ಆರಂಭವಾಗಲಿರುವ ಶಾಲಾ ರಜಾ ದಿನಗಳು ಅಂತಿಮ ಘಟ್ಟ ತಲುಪಿಕೊಳ್ಳುವ ಹೊತ್ತಿಗೆಲ್ಲ ಅದ್ದೂರಿಯಾಗಿ ತೆರೆಗೆ ಬರಲು ಸಿದ್ದವಾಗಿದೆ. ಅದುವೇ “ಸೀಸ್ ಕಡ್ಡಿ”

ನಿರ್ಮಾಪಕರಾಗಿ, ನಿರ್ದೇಶಕರಾಗಿ ಪರಿಚಿತರಾಗಿರುವ ರತನ್ ಗಂಗಾಧರ್ ನಿರ್ದೇಶನದ ಚಿತ್ರ “ಸೀಸ್ ಕಡ್ಡಿ” ನಮ್ಮೆಲ್ಲರ ಪಾಲಿಗೆ ಅಕ್ಷರದ ಬೆಳಕು ತೋರುವ ವಸ್ತು. ಅಂಥಾ ಪೆನ್ಸಿಲ್ ಅನ್ನು ರೂಪಕವಾಗಿಟ್ಟುಕೊಂಡು, ಭಾಗವಾಗಿರೋ ಲೆಡ್, ಶಾರ್ಪ್ನರ್, ಇರೇಜರ್ ಮುಂತಾದವುಗಳನ್ನು ಹೋಲುವ ಪಾತ್ರಗಳ ಮೂಲಕ ಈ ಸಿನಿಮಾ ಕಥೆ ಮೈಕೈ ತುಂಬಿಕೊಂಡಿದೆಯಂತೆ.
ಇದುವರೆಗೂ ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡಿದ್ದ ಈ ಚಿತ್ರ ನೋಡಿದವರೆಲ್ಲ ನಾನಾ ದಿಕ್ಕಿನಲ್ಲಿ ವಿಮರ್ಶೆ ಮಾಡಿದ್ದಾರೆ. ಅವೆಲ್ಲವೂ ಸಕಾರಾತ್ಮಕವಾಗಿವೆ ಅನ್ನೋದೇ ಸೀಸ್ ಕಡ್ಡಿಯ ನಿಜವಾದ ಹೆಗ್ಗಳಿಕೆ. ಒಂದಿಡೀ ಸಿನಿಮಾ ಲೈವ್ ಸೌಂಡ್ ರೆಕಾರ್ಡಿಂಗ್ ಮೂಲಕ ಮೂಡಿ ಬಂದಿರೋದು ಮತ್ತೊಂದು ವಿಶೇಷ.

ಹರಿಕಥೆಯಲ್ಲಿ ಪ್ರಾವಿಣ್ಯ ಹೊಂದಿರೋ ಸೆಕ್ಯೂರಿಟಿ ಗಾರ್ಡ್ ಮತ್ತು ಕಾಂದಂಬರಿಕಾರನೋರ್ವನ ಮುಖಾಮುಖಿಯಾಗುತ್ತೆ. ಹಾಗೆ ಸಿಕ್ಕ ಸೆಕ್ಯೂರಿಟಿ ಗಾರ್ಡ್ ಅನ್ನೇ ಬೇತಾಳನಾಗಿ ಕಲ್ಪಿಸಿಕೊಂಡು ಆ ಕಾದಂಬರಿಕಾರ ಕಥೆ ಬರೆಯಲಾರಂಭಿಸುತ್ತಾನೆ. ಆ ಬೇತಾಳನ ಪ್ರಶ್ನೆಗಳಿಗೆ ವಿಕ್ರಮಾದಿತ್ಯನ ಪಾತ್ರ ಕೊಡುವ ಉತ್ತರಗಳ ಮೂಲಕ ಕಥೆ ಗರಿಬಿಚ್ಚಿಕೊಳ್ಳುತ್ತೆ. ಮಕ್ಕಳ ಕಥನದಲ್ಲಿಯೇ ಹಿರೀಕರ ಕಥೆಯೂ ತೆರೆದುಕೊಳ್ಳುತ್ತಾ ಸಾಗುತ್ತದೆ. ಅದರೊಂದಿಗೇ ಒಟ್ಟಾರೆ ಸಿನಿಮಾದ ಪಾತ್ರಗಳೂ ಕದಲಲಾರಂಭಿಸುತ್ತವೆ.
ಈ ಸಿನಿಮಾ ಈಗಾಗಲೇ ನೋಯ್ಡಾದಲ್ಲಿ ನಡೆದಿರುವ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನ ಕಂಡಿದೆ. ಉತ್ತಮ ನಿರ್ದೇಶನ ವಿಭಾಗದಲ್ಲಿ ಪ್ರಶಸ್ತಿಯನ್ನೂ ಬಾಚಿಕೊಂಡಿದೆ. ಮೆಲ್ಬೋರ್ನ್ ಸಿನಿಮಾ ಫೆಸ್ಟಿವಲ್ ನಲ್ಲಿಯೂ ಪ್ರದರ್ಶನ ಕಂಡು ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಂಡಿದೆ.
ಸಾಮಾನ್ಯವಾಗಿ ಮಕ್ಕಳ ಸಿನಿಮಾ ಅಂದಾಕ್ಷಣ ಸಿದ್ಧಸೂತ್ರದ ಸುತ್ತ ಒಂದಷ್ಟು ಕಲ್ಪನೆಗಳು ಮೂಡಿಕೊಳ್ಳುತ್ತವೆ. ಅಂಥಾ ಕಲ್ಪನೆಗಳ ನಿಲುಕಿನಾಚೆಗೆ ಹಬ್ಬಿಕೊಂಡ ಲಕ್ಷಣಗಳಿದ್ದಾವೆ. ಚಿತ್ರತಂಡ ಹಂಚಿಕೊಂಡಿರೋ ಕೆಲ ವಿಚಾರಗಳನ್ನು ಗಮನಿಸಿದರೆ ಆ ವಿಚಾರ ಸ್ಪಷ್ಟವಾಗುತ್ತದೆ. ಇಲ್ಲಿ ಐದು ಕಥೆಗಳಳಿದ್ದಾವೆ. ಅವೆಲ್ಲವೂ ಒಂದು ಬಿಂದುವಿನಲ್ಲಿ ಸಂಧಿಸುತ್ತವೆ. ಒಬ್ಬ ಕಾದಂಬರಿಕಾರ ಮತ್ತು ಆತನ ಸುತ್ತ ಹಬ್ಬಿಕೊಂಡ ಮಕ್ಕಳ ಪಾತ್ರಗಳು… ಅವುಗಳ ಸುತ್ತ ಥ್ರಿಲ್ಲಿಂಗ್ ಅಂಶಗಳಗೊಂಡು, ಚಿಂತನೆಗೂ ಹಚ್ಚುವಂಥಾ ಧಾಟಿಯಲ್ಲಿ ಈ ಸಿನಿಮಾವನ್ನು ರೂಪಿಸಲಾಗಿದೆಯಂತೆ. ಒಟ್ಟಾರೆಯಾಗಿ ಮಕ್ಕಳ ಚಿತ್ರವಾದರೂ ಕೂಡಾ ಎಲ್ಲ ವಯೋಮಾನದವರನ್ನೂ ಆವರಿಸಿಕೊಳ್ಳುವ ಕಥನ ಸೀಸ್ ಕಡ್ಡಿಯದ್ದು.

ರತನ್ ಗಂಗಾಧರ್. ಸಂಪತ್ ಶಿವಶಂಕರ್, ಕೃತಿ ನಾಣಯ್ಯರೊಂದಿಗೆ ರತನ್ ಸೇರಿಕೊಂಡು ಚಿತ್ರ ನಿರ್ಮಾಣ ಮಾಡಿದ್ದಾರೆ. ಒಂದೊಂದು ಭಾಗದ ಚಿತ್ರಕಥೆ ಮತ್ತು ಸಂಭಾಷಣೆ ಒಬ್ಬೊಬ್ಬರು ನಿರ್ವಹಿಸಿದ್ದಾರೆ. ವಿಕ್ರಮ ಬೇತಾಳ ಭಾಗಕ್ಕೆ ಆಕರ್ಷ ಕಮಲ, ಚಿಕ್ಕಿ ಪಾತ್ರಕ್ಕೆ ಅಕ್ಷರ ಭಾರದ್ವಾಜ್, ರವೀಶ ಪಾತ್ರಕ್ಕೆ ಶರತ್ ಕೆ ಪರ್ವತವಾಣಿ, ಮಂಜಿ ಪಾತ್ರಕ್ಕೆ ಜಯಂತ್ ವೆಂಕಟ್ ಹಾಗೂ ತೌಫಿಕ್ ಪಾತ್ರಕ್ಕೆ ಮಹೇಂದ್ರ ಗೌಡ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.
ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಹಾಡುಗಳು ರೂಪುಗೊಂಡಿವೆ. ಮಹೇಶ್ ಎನ್.ಸಿ, ಪ್ರತಾಪ್ ವಿ ಭಟ್, ಮಹೇಂದ್ರ ಗೌಡ ಅನುಜಯ ಎಸ್. ಕುಮ್ಟಕರ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಇದೇ ಮೇ ತಿಂಗಳ ಕಡೇಯ ಭಾಗದಲ್ಲಿ ಸೀಸ್ ಕಡ್ಡಿ ಚಿತ್ರ ತೆರೆಗಾಣಲಿದೆ. ಈ ಮೂಲಕ ಬೇಸಿಗೆ ರಜೆಯ ಅಂಚಿನಲ್ಲಿ ಒಂದು ಅಪರೂಪದ ಅನುಭೂತಿ ಕನ್ನಡ ಚಿತ್ರ ಪ್ರೇಮಿಗಳಿಗೆ ಕಾದಿದೆ.

