ಲಿವಿಂಗ್ ರಿಲೇಷನ್ಶಿಪ್ ಸುತ್ತ ನಡೆಯುವ “ಪ್ರೇಮಿಗಳ ಗಮನಕ್ಕೆ” ಟ್ರೈಲರ್ ಬಿಡುಗಡೆ
ನಗರ ಪ್ರದೇಶಗಳಲ್ಲಿ ಅದರಲ್ಲಿಯೂ ವಿದ್ಯಾವಂತ, ಕೆಲಸಕ್ಕೆ ತೆರಳುವ ಯುವಜನರಲ್ಲಿ “ಲಿವಿಂಗ್ ರಿಲೇಷನ್ಶಿಪ್” ಅಥವಾ ಸಹಜೀವನ ನಡೆಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹುದೇ ವಿಷಯವನ್ನು ಮುಂದಿಟ್ಟುಕೊಂಡು ನಿರ್ಮಾಣ ಮಾಡಿರುವ ಚಿತ್ರ “ ಪ್ರೇಮಿಗಳ ಗಮನಕ್ಕೆ” ಟ್ರೈಲರ್ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ.

ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಹೆಚ್ಚಾಗಿ ಇಂತಹ ಸಂಬಂಧಗಳು ಕಂಡುಬರುತ್ತಿದೆ. ವಯಸ್ಸಿಗೆ ಬಂದ ಯುವಕ, ಯುವತಿಯರು ಮದುವೆಯಾಗದೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥಾಹಂದರ ಚಿತ್ರವನ್ನು ಸುಬ್ಬು ಹಾಗೂ ಯಕ್ಕಂಟಿ ರಾಜಶೇಖರ ರೆಡ್ಡಿ ನಿರ್ಮಾಣ ಮಾಡಿದ್ದಾರೆ.
ಬಿಗ್ಬಾಸ್ ವಿಜೇತ ಶಶಿ ನಾಯಕನಾಗಿ ಕಾಣಿಸಿಕೊಂಡಿದ್ದು ಕನ್ನಡ, ತುಳು ಚಿತ್ರಗಳಲ್ಲಿ ನಟಿಸಿರುವ ಚಿರಶೀ ನಾಯಕಿಯ ಪಾತ್ರದಲ್ಲಿ ನಟಿಸಿದ್ದಾರೆ ನಿರ್ಮಾಪಕ ಸುಬ್ಬು ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ವಿನ್ಸೆಂಟ್ ಇನ್ಬರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ನಿರ್ದೇಶಕ ವಿನ್ಸೆಂಟ್ ಇನ್ಬರಾಜ್ ಮಾಹಿತಿ ನೀಡಿ ಕೊರೋನಾ ಸಮಯದಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿ ಯಾರೂ ಹೊರಗಡೆ ಹೋಗದ ಸಂದರ್ಭದಲ್ಲಿ ಬೆಂಗಳೂರಿನ ಎಲ್ಲಾ ಐಟಿ, ಬಿಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಕಲ್ಪಿಸಿಕೊಟ್ಟವು. ಚಿತ್ರದ ನಾಯಕ, ನಾಯಕಿ ಇಬ್ಬರೂ ಒಂದೇ ಮನೆಯಲ್ಲಿ ವಾಸಿಸತೊಡಗುತ್ತಾರೆ. ಆಗ ಆ ಮನೆಯಲ್ಲಿ ಏನೇನು ನಡೆಯುತ್ತದೆ ? ಆಗಂತುಕನೊಬ್ಬ ಆ ಮನೆಗೆ ಹೇಗೆ ಎಂಟ್ರಿ ಕೊಡುತ್ತಾನೆ , ಅವರಿಗೆ ಯಾವರೀತಿ ತೊಂದರೆ ಕೊಡುತ್ತಾನೆ ಆ ಸಂದರ್ಭವನ್ನು ಅವರು ಹೇಗೆ ಎದುರಿಸುತ್ತಾರೆ ಎನ್ನುವುದನ್ನು ಚಿತ್ರದ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗಿದೆ ಎಂದರು
ಐದು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಒಂದು ನೈಜಘಟನೆ ಈ ಚಿತ್ರಕ್ಕೆ ಪ್ರೇರಣೆ. ಇಡೀ ಚಿತ್ರದ ಕಥೆ ನಡೆಯೋದು ಒಂದೇ ಮನೆಯಲ್ಲಿ, 2 ಪಾತ್ರಗಳ ಸುತ್ತ, ಮತ್ತೊಂದು ಪಾತ್ರ ಕೆಲ ದೃಶ್ಯಗಳಲ್ಲಿ ಮಾತ್ರ ಬಂದುಹೋಗುತ್ತೆ, ಅವೇರ್ನೆಸ್ ಜತೆಗೆ ಮನರಂಜನೆಯ ಅಂಶವನ್ನಿಟ್ಟುಕೊಂಡು ಮಾಡಿರೋ ಚಿತ್ರವಿದು. ಬೆಂಗಳೂರಿನ ಉತ್ತರಹಳ್ಳಿಯ ಮನೆಯೊಂದರಲ್ಲಿ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು

ನಾಯಕ ಶಶಿ ಮಾತಾಡಿ ಇದು ನನ್ನ ಮೂರನೇ ಚಿತ್ರ. ಈಗಿನ ಕಾಲದ ಯುವಜನತೆಗೆ ಈ ಕಥೆ ಸೂಕ್ತವಾಗಿ ಹೊಂದಿಕೆ ಆಗುತ್ತೆ ಎಂದು ಮಾಹಿತಿ ಹಂಚಿಕೊಂಡರು
ನಾಯಕಿ ಚಿರಶ್ರೀ ಮಾತನಾಡಿ ಚಿತ್ರದಲ್ಲಿ ನನ್ನದು ಐಟಿ ಕಂಪನಿಯಲ್ಲಿ ಕೆಲಸಮಾಡೋ ದರ್ಶಿನಿ ಎಂಬ ಪಾತ್ರ. ಕನ್ನಡ, ತುಳು ಸೇರಿ ಇದು ನನ್ನ ಹತ್ತನೇ ಚಿತ್ರ ಎಂದು ಹೇಳಿದರು,
ನಿರ್ಮಾಪಕ ಸುಬ್ಬು ಮಾತನಾಡಿ ನಿರ್ಮಾಣದ ಜತೆ ಖಳನಾಯಕನಾಗಿಯೂ ಚಿತ್ರದಲ್ಲಿ ನಟಿಸಿದ್ದೇನೆ, ಇದೇ ತಿಂಗಳ ಅಂತ್ಯದಲ್ಲಿ ಚಿತ್ರ ತೆರೆಗೆ ತರುವ ಯೋಜನೆಯಿದೆ ಎಂದರು.

ಮತ್ತೊಬ್ಬ ನಿರ್ಮಾಪಕ ಯಕ್ಕಂಟಿ ರಾಜಶೇಖರ ರೆಡ್ಡಿ ಮಾತನಾಡಿ ಇದೊಂದು ನೈಸ್ ಕಾನ್ಸೆಪ್ಟ್. ಒಂದೊಳ್ಳೇ ಟೀಮ್ವರ್ಕ್ ನಿಂದ ಉತ್ತಮ ಸಿನಿಮಾ ಹೊರಬರುತ್ತೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

