49th anniversary of Sri Raghavendra Chitravani Institute: Awards presented to dignitaries

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ: ಗಣ್ಯರಿಗೆ ಪ್ರಶಸ್ತಿ ಪ್ರದಾನ - CineNewsKannada.com

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ: ಗಣ್ಯರಿಗೆ ಪ್ರಶಸ್ತಿ ಪ್ರದಾನ

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಡಿ.ವಿ. ಸುಧೀಂದ್ರ ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ.

ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ ನರಸಿಂಹಲು, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಪತ್ರಕರ್ತೆ ವಿಜಯಮ್ಮ, ಇಂದ್ರಜಿತ್ ಲಂಕೇಶ್, ಪತ್ರಕರ್ತ ಸದಾಶಿವ ಶೆಣೈ, ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜಯ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಮುಂದಿನ ವರ್ಷ ದಿ.ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆ ಆರಂಭವಾಗಿ 50ವರ್ಷಗಳಾಗಲಿದೆ.

“ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿ ಆರ್ ಓ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮಾತು ಆರಂಭಿಸಿದ ಮುಖ್ಯಮಂತ್ರಿಗಳ ಮಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಸಿನಿಮಾ ಪಿಆರ್‍ಓ ಗಳನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಮುಂದಿನ ವರ್ಷ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 50ನೇ ವರ್ಷ. ಈ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಿ. ನಿಮ್ಮ ಜೊತೆಗೆ ನಾವು ಇರತ್ತೇವೆ. ಈ ವಾರ ಸಿನಿಮಾ ಜಗತ್ತಿಗೆ ಸಂಭ್ರಮದ ವಾರ. 2019 ನೇ ಸಾಲಿನ ರಾಜ್ಯ ಸಿನಿಮಾ ಪ್ರಶಸ್ತಿಗಳು ಪ್ರಕಟವಾಗಿದೆ. ನೆನ್ನೆ ಅನಂತನಾಗ್ ಹಾಗೂ ಹಾಸನ ರಘು ಅವರಿಗೆ ಪದ್ಮ ಪ್ರಶಸ್ತಿಗಳು ಲಭಿಸಿವೆ ಹಾಗೂ ಶಿವಣ್ಣ ಅವರು ಗುಣಮುಖರಾಗಿ ತಾಯಿನಾಡಿಗೆ ಮರಳಿ ಬಂದಿದ್ದಾರೆ. ಇದು ಸಂಭ್ರಮದ ವಾರ ಎಂದರು.

ಎಂ.ನರಸಿಂಹಲು, ಉಮೇಶ್ ಬಣಕಾರ್, ರಾಕ್ ಲೈನ್ ವೆಂಕಟೇಶ್, ವಿಜಯಮ್ಮ, ಸಂಜಯ್ ಗೌಡ, ರಾಗಿಣಿ ದ್ವಿವೇದಿ ಹಾಗೂ ಇಂದ್ರಜಿತ್ ಲಂಕೇಶ್ ಅವರು ತಮ್ಮ ಪ್ರೋತ್ಸಾಹಭರಿತ ಹಾಗೂ ಪ್ರೀತಿತುಂಬಿದ ಮಾತುಗಳ ಮೂಲಕ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಕಾರ್ಯಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಹಿರಿಯ ಚಲನಚಿತ್ರ ನಿರ್ಮಾಪಕರಾದ ಮೀನಾಕ್ಷಿ ಕೆ.ವಿ. ಜಯರಾಂ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ, ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ವೇಳೆ ಗಾಯಕಿ ಅನುರಾಧಾ ಭಟ್ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ, ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ, ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ಅವರಿಗೆ ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ, ಹಿರಿಯ ನಟಿ ರೇಖಾರಾವ್ ಅವರಿಗೆ ನಟಿ ಡಾ.ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ ಪ್ರಶಸ್ತಿ (ಅತ್ಯುತ್ತಮ ಸಂಗೀತ ನಿರ್ದೇಶನ, `ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕಾಗಿ, ಶಿವಮ್ಮ ಚಿತ್ರದ ಉತ್ತಮ ಕಥಾಲೇಖನಕ್ಕಾಗಿ ಜೈಶಂಕರ್ ಆರ್ಯರ್ ಅವರಿಗೆ ಖ್ಯಾತ ನಿರ್ದೇಶಕ-ನಿರ್ಮಾಪಕ ಕೆ.ವಿ. ಜಯರಾಂ ಪ್ರಶಸ್ತಿ, ಮೀನಾಕ್ಷಿ ಜಯರಾಂ ಅವರಿಂದ,

“ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ ಸಂಭಾಷಣೆಗಾಗಿ ಚಂದ್ರಜಿತ್ ಬೆಳ್ಳಿಯಪ್ಪ ಅವರಿಗೆ ಖ್ಯಾತ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಸ್.ಕೆ. ನರಹರಿ ಅವರಿಂದ, “ಫೆÇೀಟೊ” ಚಿತ್ರದ ಚೊಚ್ಚಲ ನಿರ್ದೇಶನಕ್ಕಾಗಿ ಉತ್ಸವ್ ಗೋನ್ವಾರ್ ಅವರಿಗೆ ಬಿ. ಸುರೇಶ ಅವರು ನೀಡುವ ಪ್ರಶಸ್ತಿ, “ಕೃಷ್ಣಂ ಪ್ರಣಯ ಸಖಿ” ಚಿತ್ರದ “ದ್ವಾಪರ” ಹಾಡಿನ ಗೀತರಚನೆಗಾಗಿ ಡಾ.ವಿ.ನಾಗೇಂದ್ರ ಪ್ರಸಾದ್ ಅವರಿಗೆ ಹಿರಿಯ ಪತ್ರಕರ್ತರಾದ .ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಪತ್ರಕರ್ತ ವಿನಾಯಕರಾಮ್ ಅವರು ನೀಡುವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಬಾರಿ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಅಭಿನಯಕ್ಕಾಗಿ ಶ್ರೀರಾಘವೇಂದ್ರ ಚಿತ್ರವಾಣಿಯ ವಿಶೇಷ ಪ್ರಶಸ್ತಿಗೆ ಭಾಜನರಾದರು. ಪ್ರಶಸ್ತಿ ವಿಜೇತರು ತಮ್ಮ ಸಂತೋಷವನ್ನು ಮಾತುಗಳ ಮೂಲಕ ಹಂಚಿಕೊಂಡರು. ಪ್ರಶಸ್ತಿ ಪ್ರಾಯೋಜಕರು, ಚಲನಚಿತ್ರ ಹಾಗೂ ಮಾಧ್ಯಮದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ರಾಘವೇಂದ್ರ ಚಿತ್ರವಾಣಿಯ ಸುಧೀಂದ್ರ ವೆಂಕಟೇಶ್ ತಮ್ಮ ಮಾತುಗಳ ಮೂಲಕ ಸಮಾರಂಭಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಂಸ್ಥೆಯ ಸುನೀಲ್ ಸುಧೀಂದ್ರ, ಡಿಜಿ ವಾಸು ದೇವ್ ಸೇರಿದಂತೆ ಹಲವರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin