60ರ ದಶಕದ ಕಥನ ಆಚಾರ್ ಅಂಡ್ ಕೋ ಚಿತ್ರ: ಸಿಂಧು ಜೊತೆ ಕೈಜೋಡಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್

ಪಿ.ಆರ್.ಕೆ ಪ್ರೋಡಕ್ಷನ್ಸ್ ಅಡಿ ಮೂಡಿ ಬಂದಿರುವ ಆಚಾರ್ ಅಂಡ್ ಕೋ ಚಿತ್ರದ ಮೂಲಕ 60ರ ದಶಕದ ಬೆಂಗಳೂರಿನ ಕಥನವನ್ನು ಚಿತ್ರದ ಮೂಲಕ ಕಟ್ಟಿಕೊಡಲು ಪ್ರತಿಭಾವಂತ ನಿರ್ದೇಶಕಿ ಸಿಂಧು ಶ್ರೀನಿವಾಸ ಮೂರ್ತಿ ,ಈ ಮೂಲಕ ಕನ್ನಡದ ಮಹಿಳಾ ನಿರ್ದೇಶಕಿಯ ಸಾಲಿನಲ್ಲಿ ನಿಲ್ಲುವ ಜೊತೆಗೆ ಚಿತ್ರರಂಗದಲ್ಲಿ ಭರವಸೆ ಮೂಡಿಸಲು ಮುಂದಾಗಿದ್ದಾರೆ.
ಪಿ.ಆರ್.ಕೆ ಪ್ರೋಡಕ್ಷನ್ಸ್ ಅಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ನಿರ್ಮಾಣ ಮಾಡಿರುವ ವಿಭಿನ್ನ ಕಥೆ, ಹೊಸತನದ ಆಲೋಚನೆಯ ಚಿತ್ರ ಇದೇ 28ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಚಿತ್ರವನ್ನು ಕನ್ನಡದ ಯಶಸ್ವಿ ವಿತರಣೆ ಸಂಸ್ಥೆಗಳಲ್ಲಿ ಒಂದಾದ ಕೆಆರ್ಜಿ ತೆರೆಗೆ ತರಲಿದೆ.

ಹೊಸಬರ ಹೊಸಪ್ರಯತ್ನಕ್ಕೆ ಪ್ರತಿಷ್ಠಿತ ಪಿ.ಆರ್.ಕೆ ಪ್ರೋಡಕ್ಷನ್ಸ್ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಪ್ರಸ್ತುತ ಸಿಂಧು ಶ್ರೀನಿವಾಸಮೂರ್ತಿ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ ” “ಆಚಾರ್ ಅಂಡ್ ಕೋ ” ಚಿತ್ರವನ್ನು ಪಿ.ಆರ್.ಕೆ ಪ್ರೋಡಕ್ಷನ್ಸ್ ಮೂಲಕ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಿಸಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಟ್ರೇಲರ್ ಸಾಕಷ್ಟು ವಿಶ್ವಾಸ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿತು,
ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತನಾಡಿ, ಚಿತ್ರ ನಿರ್ಮಾಣ ಮಾಡುವಾಗ ಒಳ್ಳೆಯ ಕಂಟೆಂಟ್ ಗಳಿಗೆ ಆದ್ಯತೆ ನೀಡುತ್ತೇವೆ. ಅದನ್ನು ಬಿಟ್ಟು ಯಾವುದೇ ತಾರತಮ್ಯ ಮಾಡುವುದಿಲ್ಲ. ಮಹಿಳಾ ನಿರ್ದೇಶಕರು ಮತ್ತು ತಂತ್ರಜ್ಞರಿಗೂ ಹೆಚ್ಚು ಒತ್ತು ನೀಡುತ್ತೇವೆ ಎಂದರು.
ನಿರ್ದೇಶಕ ಸಿಂಧು ಶ್ರೀನಿವಾಸಮೂರ್ತಿ ಮಾತನಾಡಿ, ಪುನೀತ್ ರಾಜ್ಕುಮಾರ್ ಕಥೆಯ ಬಗ್ಗೆ ಮೆಚ್ಚಿಕೊಂಡಿದ್ದರು. ಅದನ್ನು ಅಶ್ವಿನಿ ಮೇಡಂ ಅವರ ಬಳಿ ಚರ್ಚೆ ಮಾಡಿದ್ದರು. ಅಪ್ಪು ಸರ್ ಅವರನ್ನು ನಾವು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಕಥೆ ಕೇಳಿ ನಮ್ಮ ಮೇಲೆ ನಂಬಿಕೆ ವಿಶ್ವಾಸವಿಟ್ಟು ಪ್ರೋತ್ಸಾಹ ನೀಡಿದರು. ಯಾವುದೇ ವಿಷಯವನ್ನು ಅವರು ತುರುಕುವ ಕೆಲಸ ಮಾಡಲಿಲ್ಲ. ಹೆಚ್ಚು ಸ್ವಾತಂತ್ರ್ಯ ನೀಡಿದ್ದರು. ಹೀಗಾಗಿ ಚಿತ್ರ ಚೆನ್ನಾಗಿ ಮೂಡಿ ಬಂದಿದೆ.ಅರವತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಬೆಂಗಳೂರಿನ ಜಯನಗರ ನಿವಾಸಿ ಮಧುಸೂದನ್ ಆಚಾರ್ – ಸಾವಿತ್ರಿ ಆಚಾರ್ ಹಾಗೂ ಅವರ ಹತ್ತು ಜನ ಮಕ್ಕಳ ಸುತ್ತ ನಡೆಯುವ ಕಥೆ.
ಇದೊಂದು ಕೂಡು ಕುಟುಂಬದ ಕಥೆ ಎನ್ನಬಹುದು. ಮಧುಸೂದನ್ ಆಚಾರ್ ಪಾತ್ರದಲ್ಲಿ ಹಿರಿಯ ನಟ ಅಶೋಕ್, ಸಾವಿತ್ರಿ ಆಚಾರ್ ಪಾತ್ರದಲ್ಲಿ ಸುಧಾ ಬೆಳವಾಡಿ ಅಭಿನಯಿಸಿದ್ದಾರೆ. ಹೆಚ್ಚು ಜನ ಕಲಾವಿದರನ್ನು ಆಡಿಷನ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದೆ. ಅದರಲ್ಲಿ ಬಹುತೇಕರು ರಂಗಭೂಮಿ ಹಿನ್ನೆಲೆಯುಳ್ಳವರು. ನಾನು ಕೂಡ ಇದರಲ್ಲಿ ಅಭಿನಯಿಸಿದ್ದೇನೆ. ಅರವತ್ತರ ದಶಕದಲ್ಲಿ ನಡೆಯುವ ಕಥೆಯಾಗಿರುವುದರಿಂದ ಚಿತ್ರದಲ್ಲಿ ಸ್ವಲ್ಪ ಕೂಡ ಅಧುನಿಕತೆ ಕಾಣಬಾರದು ಹಾಗಾಗಿ ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇವೆ.
ಈ ಚಿತ್ರದ ಬಗ್ಗೆ ಪುನೀತ್ ರಾಜಕುಮಾರ್ ಅವರ 6 ನಿಮಿಷ ಸಿದ್ದ ಪಡಿಸಿದ್ದ ವಿಡಿಯೋ ನೋಡಿ ಮೆಚ್ಚುಗೆ ಸೂಚಿಸಿದ್ದರು, ಇಂದು ಅವರಿದಿದ್ದರೆ ಬಹಳ ಖುಷಿ ಪಡುತ್ತಿದ್ದರು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಯಾವುದೇ ಕೊರತೆ ಬರದಂತೆ ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ್ದಾರೆ. ನಮ್ಮ ಚಿತ್ರದ ಬಹುತೇಕ ತಂತ್ರಜ್ಞರು ಮಹಿಳೆಯರೆ ಆಗಿರುವುದು ವಿಶೇಷ. ಜುಲೈ 28 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹ ನೀಡಿ ಎಂದರು.
ಹಿರಿಯ ನಟ ಅಶೋಕ್, ಸುಧಾ ಬೆಳವಾಡಿ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು, ಛಾಯಾಗ್ರಹಕ ಅಭಿಮನ್ಯು ಸದಾನಂದನ್ ಮುಂತಾದವರು “ಆಚಾರ್ ಅಂಡ್ ಕೋ” ಚಿತ್ರದ ಕುರಿತು ಮಾತಡಿದರು.

ಚಿತ್ರದಲ್ಲಿ ಹರ್ಷಿಲ್ ಕೌಶಿಕ್, ಅನಿರುದ್ಧ್ ಸೇರಿದಂತೆ ರಂಗಭೂಮಿಯ ಕಲಾವಿದರ ದಂಡು ಚಿತ್ರದಲ್ಲಿದೆ.

ಬಿಂದುಮಾಲಿನಿ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಆಶಿಕ್ ಕುಸುಗೊಳ್ಳಿ ಅವರ ಸಂಕಲನವಿರುವ ಈ ಚಿತ್ರಕ್ಕೆ ಸಿಂಧು ಶ್ರೀನಿವಾಸಮೂರ್ತಿ ಹಾಗೂ ಕಣ್ಣನ್ ಗಿಲ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ತ್ರಿಲೋಕ್ ತ್ರಿವಿಕ್ರಮ ಬರೆದಿದ್ದಾರೆ.