ಸುಚೇಂದ್ರ ಪ್ರಸಾದ್ ನಿರ್ದೇಶನ `ಪದ್ಮಗಂಧಿ’ ಚಿತ್ರ ಅಂತಿಮ ಹಂತದಲ್ಲಿ
ಕನ್ನಡ ಚಿತ್ರರಂಗದ ಅಪ್ರತಿಮ ನಟ, ಕಂಚಿನ ಕಂಠದ ಕಲಾವಿದ ಸುಚೇಂದ್ರ ಪ್ರಸಾದ್ ನಿರ್ದೇಶನದ `ಪದ್ಮಗಂಧಿ’ ಚಿತ್ರ ಅಂತಿಮ ಘಟ್ಟ ತಲುಪಿದೆ.

ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ರೂಪುಗೊಳ್ಳುತ್ತಿರುವ ಚಿತ್ರವನ್ನು ಸುಚೇಂದ್ರ ಪ್ರಸಾದ್ ನಿರ್ದೇಶನ ಮಾಡುತ್ತಿದ್ದಾರೆ. ಮಾಜಿ ಎಂಎಲ್ಸಿ, ಪ್ರಸಿದ್ಧ ಅಂಕಣಕಾರ್ತಿ, ಸಂಸ್ಕೃತದ ಭೂಮಿಕೆಯಲ್ಲಿ ನಾನಾ ದಿಕ್ಕಿನ ಅಧ್ಯಯನ, ಪಾಂಡಿತ್ಯದ ಮೂಲಕ ಹೆಸರಾಗಿರುವ ಎಸ್.ಆರ್ ಲೀಲಾ ಚಿತ್ರಕ್ಕೆ ಕಥೆ ಸಿದ್ಧಪಡಿಸಿ ನಿರ್ಮಾಪಕಿಯಾಗಿಯೂ ಜೊತೆಯಾಗಿದ್ದಾರೆ.
ದೈವೀಕ ಅನುಭೂತಿ ಸ್ಫುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಿಧಿ ವಿಸ್ತರಿಸಿಕೊಳ್ಳುತ್ತಾ ಸಾಗಿದ್ದ ಲೀಲಾ ಅವರ ಪಾಲಿಗೆ, ಅದರ ಅಗಾಧತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರೆಯಂತೆ ಭಾಸವಾಗಲಾರಂಭಿಸಿತ್ತು. ಕಡೆಗೂ ಕಮಲ ಪುಷ್ಪದ ಬಗ್ಗೆ ನಿರಂತರವಾಗಿ ಆರೇಳು ವರ್ಷ ಅಧ್ಯಯನ ನಡೆಸಿದ್ದ ಅವರು ಕಡೆಗೂ ಅಪರೂಪದ ಕಥೆಯೊಂದನ್ನು ಸಿದ್ಧಪಡಿಸಿ, ನಂತರ ಸುಚೇಂದ್ರ ಪ್ರಸಾದ್ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದರು.

ಸಸ್ಯ ಶಾಸ್ತ್ರದ ಪ್ರಕಾರ ಏಷ್ಯಾ ಖಂಡದ ದೇಸೀ ಹೂವಾದ ಕಮಲ, ಪುರಾಣ ಕಾಲದಿಂದಲೂ ಶ್ರೇಷ್ಠ ಪುಷ್ಪವಾಗಿ ಘನತೆ ಪಡೆದುಕೊಂಡಿದೆ. ಪ್ರಾಚೀನ ಕಾಲದಿಂದ ಆರಂಭವಾಗಿ ಅರ್ವಾಚೀನ ಕಾಲದವರೆಗೂ ಅದೇ ಪ್ರಭೆಯನ್ನು ಉಳಿಸಿಕೊಂಡಿರುವ ಕಮಲ ವಿಶಾಲವಾದ ಹರವುಳ್ಳ ಅಪರೂಪದ ಪುಷ್ಪ. ಕೆದಕುತ್ತಾ ಹೋದರೆ ಈಜಿಪ್ಟ್ ನಾಗರೀಕತೆಯವರೆಗೂ ಕೂಡಾ ಇದರ ಪ್ರಭಾವಳಿ ಹಬ್ಬಿಕೊಂಡಿರುವ ಅಚ್ಚರಿಯೊಂದು ಎದುರಾಗುತ್ತೆ.
ಸಾವಿರಾರು ವರ್ಷದ ಹಿಂದಿನ ಬೀಜವನ್ನು ಇಂದು ಬಿತ್ತಿದರೂ ಸಲೀಸಾಗಿ ಚಿಗುರೊಡೆದು, ಗಿಡವಾಗಿ, ಹೂವಾಗಿ ನಗುವ ಶಕ್ತಿ ಈ ಜಗತ್ತಿನಲ್ಲಿ ಯಾವುದಾದರೂ ಪುಷ್ಪಕ್ಕಿದೆ ಎಂದರೆ ಅದು ಕಮಲಕ್ಕೆ ಮಾತ್ರ. ಸಮರ ಕಲೆಗಳಲ್ಲಿಯೂ ಈ ಹೂವಿನ ಐತಿಹ್ಯವಿದೆ. ಮಹಾಭಾರತದಲ್ಲಿ ಘಟಿಸುವ ಯುದ್ಧದಲ್ಲಿ ನಾನಾ ವ್ಯೂಹಗಳು ರಚನೆಯಾದದ್ದು ಗೊತ್ತೇ ಇದೆ. ಚಕ್ರವ್ಯೂಹ, ಗರುಡ ವ್ಯೂಹದಂಥವುಗಳು ನಮ್ಮೆಲ್ಲರಿಗೆ ಪರಿಚಿತ. ವಿಶೇಷವೆಂದರೆ, ಅದರಲ್ಲಿ ಪದ್ಮವ್ಯೂಹವೂ ಸೇರಿಕೊಂಡಿದೆ.

ಪ್ರಾಧ್ಯಾಪಕಿಯಾಗಿ, ಲೇಖಕಿಯಾಗಿ, ಸಂಶೋಧಕಿಯಾಗಿ ಸದಾ ಹೊಸ ಅರಿವು ಸೃಷ್ಟಿಯತ್ತ ತುಡಿಯುವ ಮನಃಸ್ಥಿತಿ ಹೊಂದಿರುವ ಎಸ್.ಆರ್ ಲೀಲಾ ಸಿನಿಮಾ ರಂಗಕ್ಕೇನು ಅಪರಿಚಿತರಲ್ಲ. ಅಂಥಾ ಅಗಾಧ ತಿಳಿವಳಿಕೆ, ಭಿನ್ನ ಗ್ರಹಿಕೆಗಳ ಭೂಮಿಕೆಯಲ್ಲಿಯೇ ಅವರು ಪದ್ಮಗಂಧಿಯ ಕಥನವನನು ಕಟ್ಟಿಕೊಟ್ಟಿದ್ದಾರೆ. ಸುಚೇಂದ್ರ ಪ್ರಸಾದ್ ಸಮರ್ಥ ಸಾರಥ್ಯದಲ್ಲಿ, ಪ್ರತಿಭಾನ್ವಿತರ ತಂಡದ ಮೂಲಕ ಪದ್ಮಗಂಧಿ ಅಂತಿಮ ಘಟ್ಟ ತಲುಪಿಕೊಂಡಿದೆ.
ಮಿಕ್ಕುಳಿದ ಒಂದಷ್ಟು ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಪದ್ಮಗಂಧಿಯ ಬಗ್ಗೆ ಮತ್ತೊಂದಷ್ಟು ಕೌತುಕದ ವಿಚಾರಗಳನ್ನು ಚಿತ್ರತಂಡ ಪ್ರೇಕ್ಷಕರ ಮುಂದೆ ತೆರೆದಿಡಲಿದೆ. ಇದೇ ಮೇ ತಿಂಗಳ ನಂತರ ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ತಯಾರಾಗಿರುವ ಪದ್ಮಗಂಧಿ ಬಿಡುಗಡೆ ದಿನಾಂಕ ಘೋಶಣೆಯಾಗಲಿದೆ.

ಸಿನಿಮಾ ಮಕ್ಕಳ ಚಿತ್ರದ ಆವರಣದಲ್ಲಿ ಅಣಿಗೊಳ್ಳುತ್ತಿದೆ. ಗುರುಕುಲದ ಹಿನ್ನೆಲೆಯಿಂದ ಗರಿಬಿಚ್ಚಿಕೊಳ್ಳುವ ಪದ್ಮಗಂಧಿ ಎಸ್.ಆರ್ ಲೀಲಾ ಕನಸಿನ ಕೂಸು. ಪರಿಕಲ್ಪನೆ, ನಿರ್ಮಾಣ ಡಾ. ಎಸ್.ಆರ್ ಲೀಲಾ, ಚಿತ್ರಕಥೆ-ಸಂಭಾಷಣೆ-ನಿರ್ದೇಶನ ಸುಚೇಂದ್ರ ಪ್ರಸಾದ, ಡಾ. ದೀಪಕ್ ಪರಮಶಿವನ್ ಸಂಗೀತ, ಎನ್. ನಾಗೇಶ್ ನಾರಾಯಣಪ್ಪ ಸಂಕಲನ, ಮನು ಯಾಪ್ಲಾರ್ ಮತ್ತು ನಾಗರಾಜ್ ಅದ್ವಾನಿ ಛಾಯಾಗ್ರಹಣವಿರುವ ಈ ಚಿತ್ರ ಮಹಾಪದ್ಮ, ಮೃತ್ಯುಂಜಯ ಶಾಸ್ತ್ರಿ , ಪಂಡಿತ ಪ್ರಸನ್ನ ವೈದ್ಯ, ಡಾ. ದೀಪಕ್ ಪರಮಶಿವನ್, ಹೇಮಂತ ಕುಮಾರ ಜಿ, ಪರಿಪೂರ್ಣ, ಮುಂತಾದವರ ತಾರಾಗಣದೊಂದಿಗೆ ಕಳೆಗಟ್ಟಿಕೊಂಡಿದೆ.

