ದಯಾಳ್ ಪದ್ಮನಾಭನ್ ಹೊಸ ಸಿನಿಮಾ “ಕಪಟಿ” ಆಗಸ್ಟ್ 23 ಕ್ಕೆ ಬಿಡುಗಡೆ
ಸಧಬಿರುಚಿಯ ಚಿತ್ರಗಳ ಮೂಲಕ ಗಮನ ಸೆಳೆದಿರುವ ನಿರ್ಮಾಪಕ, ನಿರ್ದೇಶಕ ದಯಾಳ್ ಪದ್ಮನಾಭನ್, ಹೊಸ ಹೊಸ ಕಂಟೆಂಟ್ಗಳು ಜನರ ಮನ ಗೆಲ್ಲುವ ಪ್ರಯತ್ನ ಮಾಡಿಕೊಂಡು ಬಂದಿದ್ದಾರೆ. ಅದರ ಮುಂದುವರಿದ ಭಾಗ ಎನ್ನುವಂತೆ “ಕಪಟಿ” ಹಿಂದೆ ಬಿದ್ದಾರೆ. ಕಪಟಿ ಎಂದರೆ ಏನು ಯಾವಾಗ ಚಿತ್ರ ತೆರೆಗೆ ಬರಲಿದ ಎನ್ನುವುದೂ ಸೇರಿದಂತೆ ಹಲವು ವಿಷಯಗಳ ಕುರಿತು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಡಿ.ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ ಎಸ್ ಪಿ, ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಕಪಟಿ” ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.
ನಟ ಡಾರ್ಲಿಂಗ್ ಕೃಷ್ಣ ಟೀಸರ್ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.ಬಳಿಕ ಚಿತ್ರತಂಡ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿತು.
ಈ ವೇಳೆ ಮಾತಿಗಿಳಿದ ನಿರ್ಮಾಪಕ ದಯಾಳ್ ಪದ್ಮನಾಭನ್ ಅವರು,ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹನ್ನೆರಡು ಚಿತ್ರಗಳಲ್ಲಿ ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ , ನಿರ್ದೇಶನವನ್ನೂ ಮಾಡಿದ್ದೇನೆ. ಆದರೆ ಈ ಚಿತ್ರವನ್ನು ನಿರ್ಮಾಣ ಮಾತ್ರ ಮಾಡಿದ್ದೇನೆ. ರವಿಕಿರಣ್ ಹಾಗೂ ಚೇತನ್ ಎಸ್ ಪಿ ನಿರ್ದೇಶನ ಮಾಡಿದ್ದಾರೆ. ಇವರು ಹಿಂದೆ “ಕೋಮ” ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ಮಾಹಿತಿ ಹಂಚಿಕೊಂಡರು.
ಚಿತ್ರ “ಡಾರ್ಕ್ ನೆಟ್” ಕಥಾಹಂದರ ಒಳಗೊಂಡಿದೆ. ಕನ್ನಡದಲ್ಲಿ “ಗುಲ್ಟು” ಚಿತ್ರದ ನಂತರ ಈ ಜಾನರ್À ಚಿತ್ರ ಕಂಟೆಂಟ್ ಓರಿಯಂಟೆಡ್ ಚಿತ್ರಗಳಿಂದ ಯಾರಿಗೂ ನಷ್ಟವಿಲ್ಲ ಎನ್ನುವ ನಂಬಿಕೆ ನನ್ನದು. ಆದರೆ ಸ್ವಲ್ಪ ತಾಳ್ಮೆ ಇರಬೇಕು ಅಷ್ಟೇ. ಅದಕ್ಕೆ ಉದಾಹರಣೆ ನನ್ನ ಚಿತ್ರಗಳು. “ಕಪಟಿ” ಚಿತ್ರವನ್ನು ಇತ್ತೀಚೆಗೆ ಸ್ನೇಹಿತರ ಜೊತೆ ನೋಡಿದೆ. ಚೆನ್ನಾಗಿ ಬಂದಿದೆ. ಚಿತ್ರ ಆಗಸ್ಟ್ 23 ರಂದು ಬಿಡುಗಡೆಯಾಗಲಿದೆ ಎಂದು ಮಾಹಿತಿ ಹಂಚಿಕೊಂಡರು
ನಿರ್ದೇಶಕದ್ವಯರಾದ ರವಿಕಿರಣ್ ಹಾಗೂ ಚೇತನ್ ಎಸ್ ಪಿ ಜೋಡಿ ಮಾತನಾಡಿ, ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥಾಹಂದರ ಹೊಂದಿರುವ ಚಿತ್ರವಿದು. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದು ತಿಳಿಸಿದರು.
ನಟಿ ಸುಕೃತಾ ವಾಗ್ಲೆ, ಚಿತ್ರರಂಗವನ್ನು ಬಿಟ್ಟು ಉಡುಪಿಯಲ್ಲಿ ನೆಲೆಸಿದ್ದೆ. ನಿರ್ದೇಶಕರು ಹೇಳಿದ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೆ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ ಎಂದರು “
ಪ್ರಮುಖಪಾತ್ರದಲ್ಲಿ ನಟಿಸಿರುವ ದೇವ್ ದೇವಯ್ಯ ಹಾಗೂ ಸಾತ್ವಿಕ್ ಕೃಷ್ಣನ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿ, ಅವಕಾಶ ನೀಡಿದ ನಿರ್ಮಾಪಕ ದಯಾಳ್ ಅವರಿಗೆ ಧನ್ಯವಾದ ಹೇಳಿದರು.
ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಜೋಹನ್ ಮಾತನಾಡಿದರು.