ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ
ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ “ನಮಾಮಿ ನಮಾಮಿ” ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ.


ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
ಚಂದ್ರು ಕನ್ನಡದ ಹೆಮ್ಮೆ

ದೇಸಿ ಸೊಗಡಿನ ನಿರ್ದೇಶಕ ಆರ್, ಚಂದ್ರು ಕನ್ನಡ ನೆಲದ ಹೆಮ್ಮೆ. ರೈತ ಕುಟುಂಬದಿಂದ ಬಂದ ಆರ್. ಚಂದ್ರ ಚಿತ್ರರಂಗದಲ್ಲಿ ನಡೆದು ಬಂದ ಹಾದಿ ಬಲು ರೋಚಕ, ನಿರ್ದೇಶಕನಾಗಿ,ನಿರ್ಮಾಪಕನಾಗಿ ಎತ್ತರಕ್ಕೆ ಬೆಳದಿದ್ದಾರೆ. ಇದೀಗ ಕಬ್ಜ ಚಿತ್ರದ ಮೂಲಕ ಇಡೀ ವಿಶ್ವ ಭಾರತೀಯ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಲು ಸಜ್ಜಾಗಿದ್ದಾರೆ. ಅದಕ್ಕಾಗಿ ವೇದಿಕೆಯೂ ಸಿದ್ದಗೊಂಡಿದೆ. ಘಟಾನುಘಟಿ ನಾಯಕರು, ಕಲಾವಿದರು ಚಿತ್ರದಲ್ಲಿ ನಟಿಸಿದ್ದು ಚಂದ್ರು ಅವರ ಸ್ಟಾರ್ ಪಟ್ಟ ಮತ್ತೆ ಮುಗಿಲೆತ್ತರಕ್ಕೆ ಹಾರಲಿದೆ. ಜೊತೆಗೆ ಕನ್ನಡದ ಭಾವುಟ ಕೂಡ ಎನ್ನುವುದು ಹೆಮ್ಮೆಯ ಸಂಗತಿ.
ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್ ಚಂದ್ರು, “ಕಬ್ಜ” ಚಿತ್ರದ ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನ ತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.
“ಕಬ್ಜ” ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ. ಶಿವನನ್ನು ಆರಾಧಿಸುವ ಈ ಹಾಡು ಬಹಳ ಮಧುರವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಪ್ರೋತ್ಸಾಹ ನೀಡಿ ಎಂದರು ನಟಿ ಶ್ರೇಯಾ ಶರಣ್.

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ “ಕಬ್ಜ” ಚಿತ್ರದ ಟೀಸರ್ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 26 ರಂದು ಶಿಡ್ಲಘಟ್ಟದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಕಮರ್ಷಿಯಲ್ ಹಾಡೊಂದು ಲೋಕಾರ್ಪಣೆಯಾಗಲಿದೆ.
ಪ್ರಪಂಚದಾದ್ಯಂತ ಅಭಿಮಾನಿಗಳು ಕಾಯುತ್ತಿರುವ “ಕಬ್ಜ” ಚಿತ್ರ ಮಾರ್ಚ್ 17 ರಂದು(ಪನೀತ್ ರಾಜಕುಮಾರ್ ಜನ್ಮದಿನದಂದು) ಅದ್ದೂರಿಯಾಗಿ ಬಿಡುಗಡೆಯಾಗಲಿದೆ

