ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಅಕ್ಟೋಬರ್ 16 ರಂದು ಬಿಡುಗಡೆ
ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ “ಬೃಂದಾ ವಿಹಾರಿ” ಚಿತ್ರ ಇದೇ ಅಕ್ಟೋಬರ್ 16 ರಂದು ಬಿಡುಗಡೆಯಾಗುತ್ತಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ.
ಗಣೇಶ್ ಹಾಗೂ ಶ್ರೀನಿವಾಸರಾಜು ಕಾಂಬಿನೇಶನ್ ನಲ್ಲಿ ಮೂಡಿಬಂದಿದ್ದ “ಕೃಷ್ಣಂ ಪ್ರಣಯ ಸಖಿ” ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಆ ಚಿತ್ರದ ನಂತರ ಇವರಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಸದಭಿರುಚಿಯ ಚಿತ್ರಗಳ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಜನಪ್ರಿಯವಾಗಿದ್ದು, ಗಣೇಶ್ ಅವರ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಛಾಯಾಗ್ರಹಣ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.


