ಕರಾವಳಿ ಭಾಗದಲ್ಲಿ ನಡೆಯುವ ಕಥೆಗೆ ಲೂಸ್ ಮಾದ ಯೋಗೇಶ್ ನಾಯಕ
ಕನ್ನಡದ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ಒಂದಾದ “ದುನಿಯಾ” ಚಿತ್ರದಲ್ಲಿ “ಲೂಸ್ ಮಾದ” ಎಂಬ ಪಾತ್ರ ನಿರ್ವಹಿಸಿದ್ದ ನಟ ಯೋಗೇಶ್ ಆ ಪಾತ್ರಕ್ಕೆ ನೋಡುಗರು ಫಿದಾ ಆದರು ಅಂದಿನಿಂದಲೂ “ಲೂಸ್ ಮಾದ” ಯೋಗೇಶ್ ಅಂತಲೇ ಯೋಗೇಶ್ ಜನಪ್ರಿಯರಾದರು. ಈಗ “ಲೂಸ್ ಮಾದ” ಚಿತ್ರದ ಶೀರ್ಷಿಕೆಯಾಗಿದೆ.

ಚಿತ್ರದ ನಾಯಕನಾಗಿ ಯೋಗೇಶ್ ಅವರೆ ಅಭಿನಯಿಸುತ್ತಿದ್ದಾರೆ.ಧರ್ಮೇಂದ್ರ ನಿರ್ಮಿಸುತ್ತಿದ್ದು ರಂಜಿತ್ ಕುಮಾರ್ ಗೌಡ ನಿರ್ದೇಶಿಸುತ್ತಿದ್ದಾರೆ. ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು .
ನಟ ಯೋಗೇಶ್ ತಂದೆ, ನಿರ್ಮಾಪಕ ಟಿ.ಪಿ.ಸಿದ್ದರಾಜು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರದ ನಿರ್ಮಾಪಕ ಧರ್ಮೇಂದ್ರ ಕ್ಯಾಮೆರಾ ಚಾಲನೆ ಮಾಡಿದರು. ಉದಯ್ ಶೆಟ್ಟಿ, ಉಮೇಶ್ ಶೆಟ್ಟಿ, ರಘು ಗುಜ್ಜಲ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಾಹಿತ್ಯ ಯೋಗೇಶ್ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ್ದರು.

ನಾಯಕ ಲೂಸ್ ಮಾದ ಯೋಗೇಶ್ ಮಾತನಾಡಿ ಸ್ನೇಹಿತರ ಮೂಲಕ ನಿರ್ಮಾಪಕ ಧರ್ಮೇಂದ್ರ ಪರಿಚಯವಾದರು. ನಿರ್ದೇಶಕರ ಜೊತೆ ಈ ಹಿಂದೆ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ “ಕಂಸ” ಎಂಬ ಸಿನಿಮಾ ಆರಂಭವಾಗಬೇಕಿತ್ತು. ಕಾರಣಾಂತರದಿಂದ ಸಿನಿಮಾ ವಿಳಂಬವಾಯಿತು. ಈಗ “ಲೂಸ್ ಮಾದ” ಸಿನಿಮಾ ಶುರುವಾಗಿದೆ. ಈ ಶೀರ್ಷಿಕೆಯನ್ನಿಟ್ಟುಕೊಂಡು ಹಿಂದೆ ಸಾಕಷ್ಟು ನಿರ್ಮಾಪಕರು ಚಿತ್ರ ಮಾಡಲು ಮುಂದಾಗಿದ್ದರು. ನಾನೇ ಬೇಡ ಎನ್ನುತ್ತಿದ್ದೆ. ಆದರೆ ಈ ಕಥೆಗೂ ಶೀರ್ಷಿಕೆಗೂ ಪೂರಕವಾಗಿದೆ. “ದುನಿಯಾ” ಸಿನಿಮಾದ ಲೂಸ್ ಮಾದ ನ ಪಾತ್ರಕ್ಕೂ ಈ ಚಿತ್ರದ ಪಾತ್ರಕ್ಕೂ ಸಂಬಂಧ ಇರುವುದಿಲ್ಲ. ನೋಡುಗರಿಗೆ ಒಂದೊಳ್ಳೆ ಸಿನಿಮಾ ಕೊಡಬೇಕು. ಹಾಗಾಗಿ ಇಡೀ ತಂಡದ ಸಹಕಾರ ಮುಖ್ಯ ಎಂದರು
ಚಿತ್ರಕ್ಕೆ ಪ್ರದೀಪ್ ರೆಡ್ಡಿ ಛಾಯಾಗ್ರಹಣ, ರಂಜನ್ ಸಂಕಲನ, ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಚಿನ್ ಪೂಜಾರಿ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ತಾರಾಗಣದಲ್ಲಿ ಕಿಶೋರ್, ಆದಿ ಲೋಕೇಶ್, ಅಚ್ಯುತಕುಮಾರ್ ಮೊದಲಾದ ಅನುಭವಿ ಕಲಾವಿದರ ತಾರಾಬಳಗವಿರುವ “ಲೂಸ್ ಮಾದ” ಚಿತ್ರ ನೋಡುಗರಿಗೆ ಮನೋರಂಜನೆಯ ರಸದೌತಣ ನೀಡುವುದು ಖಂಡಿತ ಎಂದು ತಿಳಿಸಿದರು.
ನಿರ್ಮಾಪಕ ಧರ್ಮೇಂದ್ರ ಮಾತನಾಡಿ ಮೂಲತಃ ಮಂಗಳೂರಿನವನು. ವೃತ್ತಿಯಲ್ಲಿ ಕಂಟ್ರ್ಯಾಕ್ಟರ್. ಸಿನಿಮಾರಂಗ ನನಗೆ ಹೊಸತು. ಕೆಲವು ಸ್ನೇಹಿತರು ಚಿತ್ರವನ್ನು ನಿರ್ಮಾಣ ಮಾಡಿ ಅಂತ ಹೇಳಿದರು. ನಿರ್ದೇಶಕರು ಹೇಳಿದ ಕಥೆಯೂ ಇಷ್ಟವಾಯಿತು. ಜೊತೆಗೆ ನಾನು ಲೂಸ್ ಮಾದ ಯೋಗೇಶ್ ಅಭಿಮಾನಿ. ಅವರೆ ಚಿತ್ರದ ನಾಯಕರಾಗಿರುವುದು ಖುಷಿಯಾಗಿದೆ. ಇಂದಿನ ಸಮಾರಂಭಕ್ಕೆ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು

ರಂಜಿತ್ ಕುಮಾರ್ ಗೌಡ ಮಾತನಾಡಿ “ಲೂಸ್ ಮಾದ” ನಿರ್ದೇಶನದ ಮೂರನೇ ಚಿತ್ರ. ಇದೊಂದು ಕರಾವಳಿ ಭಾಗದಲ್ಲಿ ನಡೆಯುವ ಕಥೆ. ಉಡುಪಿ, ಸುರತ್ಕಲ್ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣವಾಗಲಿದೆ. ಆಗಸ್ಟ್ 25 ರಿಂದ ಚಿತ್ರೀಕರಣ ಆರಂಭವಾಗಲಿದೆ. ಯೋಗೇಶ್ ಹಲವು ವರ್ಷಗಳ ಪರಿಚಯ. ಅವರಿಗೆ ಈ ಚಿತ್ರದ ಕಥೆ ಹೇಳಿದೆ. ನಾಯಕನಾಗಿ ನಟಿಸಲು ಒಪ್ಪಿಕೊಂಡರು ಎಂದು ಹೇಳಿದರು
ಧರ್ಮೇಂದ್ರ ನಿರ್ಮಾಣಕ್ಕೆ ಮುಂದಾದರು. ಎಲ್ಲಾ ಪ್ರಾಣಿಗಳಿಗಿಂತ ತೋಳ ಪಳಗಿಸುವುದು ಸ್ವಲ್ಪ ಕಷ್ಟ. ಅದು ಯಾರ ಮಾತನ್ನು ಕೇಳದ ಪ್ರಾಣಿ. ಚಿತ್ರದಲ್ಲಿ ನಾಯಕನ ಸ್ವಭಾವವೂ ಇದೇ ರೀತಿ. ಯಾವುದಕ್ಕೂ ಹಾಗೂ ಯಾರಿಗೂ ಅಂಜದ ಹುಡುಗ. ಹಿಂದೆ ಯೋಗೇಶ್ ಮಾಡಿರುವ ಪಾತ್ರಗಳಿಗಿಂತ ಭಿನ್ನ ಪಾತ್ರ. ಕಿಶೋರ್ ಸಹ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆದಿ ಲೋಕೇಶ್, ಅಚ್ಯುತ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ಹೇಳಿದರು
ನಟ ಆದಿ ಲೋಕೇಶ್ ಮಾತನಾಡಿ ಯೋಗೇಶ್ ಜೊತೆಗೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ ಎಂದರು

ಸಂಗೀತ ನಿರ್ದೇಶಕ ಶಶಾಂಕ್ ಶೇಷಗಿರಿ, ಛಾಯಾಗ್ರಾಹಕ ಪ್ರದೀಪ್ ರೆಡ್ಡಿ, ಸಂಕಲನಕಾರ ರಂಜನ್, ಕಾರ್ಯಕಾರಿ ನಿರ್ಮಾಪಕ ಪವನ್ ಕುಮಾರ್ ಉಡುಪಿ ಹಾಗೂ ಚಿತ್ರದಲ್ಲಿ ಅಭಿನಯಿಸುತ್ತಿರುವ ವಿವಾನ್ ಆಕರ್ಷ್, ರಿತೇಶ್ ಮುಂತಾದವರು ಹಾಜರಿದ್ದರು

