ಡಾ.ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಡಿಸೆಂಬರ್ 17 ರಂದು ಬೃಹತ್ ಪ್ರತಿಭಟನೆ
ಮೇರು ನಟ ಡಾ.ವಿಷ್ಣುವರ್ಧನ್ ಅವರು ನಮ್ಮನ್ನಗಲಿ 14 ವರ್ಷಗಳಾದವು. ಆದರೆ ಇಂದಿಗೂ ಅವರ ಅಂತ್ಯಸಂಸ್ಕಾರಗೊಂಡ ಜಾಗವನ್ನು ಅಭಿವೃದ್ದಿಪಡಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಿಲ್ಲ. ವಾಸ್ತವದಲ್ಲಿ ಹಿರಿಯ ಕಲಾವಿದ ಬಾಲಕೃಷ್ಣ ಅವರಿಗೆ ಸರ್ಕಾರ ಅನುದಾನವಾಗಿ ನೀಡಿರುವ ಜಾಗವೇ ಅಭಿಮಾನ್ ಸ್ಟುಡಿಯೋ.
ಕನ್ನಡಿಗರು ಚಿತ್ರರಂಗದ ಕೆಲಸಗಳಿಗೆ ಮದರಾಸಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಕನಸು ಹೊತ್ತು ಬಾಲಣ್ಣನವರು ಸರ್ಕಾರದ ಬಳಿ ಇಪ್ಪತ್ತು ಎಕರೆ ಜಾಗವನ್ನು 99 ವರುಷಕ್ಕೆ ಅನುದಾನವಾಗಿ ಪಡೆದು ಅಭಿಮಾನ್ ಸ್ಟುಡಿಯೋ ನಿರ್ಮಿಸಿದ್ದರು.
ಈ ನಡುವೆ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿಗೆ ಸ್ಥಳಾಂತರಗೊಂಡಿತು. ಆದರೆ ಅಭಿಮಾನಿಗಳು ಸ್ಮಾರಕ ಎಲ್ಲೇ ಆದರೂ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಹಠವಿಡಿದು, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಅತ್ಯಂತ ಅದ್ದೂರಿಯಾಗಿ ಅಭಿಮಾನ್ ಸ್ಟುಡಿಯೋದ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ.
ಅಭಿಮಾನ್ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜೊತೆಗೆ, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು ನೀಡುತ್ತಿದ್ದಾರೆ. ಈ ಕುರಿತಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಭೇಟಿಮಾಡಿ ಅಹವಾಲನ್ನು ಸಲ್ಲಿಸಲಾಗಿದೆ. ಒಬ್ಬೇ ನಟನಿಗೆ ಎರಡೆರಡು ಕಡೆ ಸ್ಮಾರಕ, ಪುಣ್ಯಭೂಮಿ ಮಾಡುವುದು ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿಗೆ ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುವುದಾಗಿ ತಿಳಿಸಿರುತ್ತೇವೆ.
ಪ್ರತಿಭಟನೆ ಎಲ್ಲಿ: ಯಾಕೆ
ಯಾವುದೇ ಸೂಕ್ತಪ್ರತಿಕ್ರಿಯೆಗಳು ಅವರಿಂದ ಬರದೇ ಇರುವುದರಿಂದ ಇದೇ ಡಿಸೆಂಬರ್ 17 ರಂದು ಡಾ.ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಿಗ್ಗೆ ಹತ್ತರಿಂದ ಸಂಜೆ ಆರು ಗಂಟೆ ತನಕ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಆದಿಯಾಗಿ ಡಾ.ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಸುಮಾರು ಐವತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ.
ಒಂದು ವೇಳೆ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ, ದೆಹಲಿಯಲ್ಲಿ ಹೋರಾಟವನ್ನು ಮುಂದುವರಿಸಲಿದ್ದೇವೆ ಜೊತೆಗೆ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಲಿದ್ದೇವೆ ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ