“ಸಂಜು ವೆಡ್ಸ್ ಗೀತಾ-2’ ಚಿತ್ರದ ಹಾಡು ಬಿಡುಗಡೆ : ಚಿತ್ರ ಶೀಘ್ರ ತೆರೆಗೆ
ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಶ್ರೀನಗರ ಕಿಟ್ಟಿ ಅಭಿನಯದ “ಸಂಜು ವೆಡ್ಸ್ ಗೀತಾ-2” ಚಿತ್ರದ ಚಿತ್ರೀಕರಣ ಪೂರ್ಣಗೊಂಡು ಬಿಡುಗಡೆಗೆ ಸಜ್ಜಾಗಿದೆ. ಈ ನಡುವೆ ಎರಡನೇ ಹಾಡು ಬಿಡುಗಡೆಯಾಗಿದೆ. ಸಿನಿಮಾ ತಂಡದ ಜೊತೆಗೆ ರಾಜಕೀಯ ನೇತಾರರು ಹಾಗು ಸ್ವಾಮೀಜಿಗಳು ಹಾಡು ಬಿಡುಗಡೆ ಮಾಡಿ ಚಿತ್ರಕ್ಕೆ ಮತ್ತು ತಂಡಕ್ಕೆ ಶುಭ ಹಾರೈಸಿದ್ದಾರೆ

ಛಲವಾದಿ ಕುಮಾರ್ ನಿರ್ಮಾಣ ಮಾಡಿರುವ “ಸಂಜು ವೆಡ್ಸ್ ಗೀತಾ-2 “ಚಿತ್ರದ ಹಾಡು ಬಿಡುಗಡೆ ವೇಳೆ ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಬಸನಾಗಿ ಸ್ವಾಮೀಜಿ ಸೇರಿದಂತೆ ಹಲವು ಈ ವೇಳೆ ಹಾಜರಿದ್ದರು
ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ.
ವಿಧಾನ ಪರಿಷತ್ ಪ್ರತಿಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ಸಹೋದರ ಕುಮಾರ್ ಈಗ ಸಿನಿಮಾ ರಂಗದಲ್ಲಿ ನಿರ್ಮಾಪಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ, ಅದ್ದೂರಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ, ನಾಗಶೇಖರ್ ಇದಕ್ಕೆ ನಿರ್ದೇಶನ ಮಾಡಿದ್ದಾರೆ. ಸಮಾಜದ ನ್ಯೂನತೆಗಳನ್ನು ತೊಡೆದು ಹಾಕುವ ಕೆಲಸವನು ಸಿನಿಮಾಗಳು ಮಾಡಲಿ, ಈ ಚಿತ್ರವು ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ
ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡಿ ಡಿಪರೆಂಟ್ ಪ್ಯಾಟ್ರನ್ನಲ್ಲಿ ಮೂಡಿಬಂದಿರುವ, ರಾಗಿಣಿ ಅಭಿನಯದ ಈ ಹಾಡನ್ನು ಛಲವಾದಿ ನಾರಾಯಣಸ್ವಾಮಿ ಅವರಿಂದಲೇ ರಿಲೀಸ್ ಮಾಡಿಸಬೇಕೆಂದಿತ್ತು, ಹಾಡು ಅದ್ಭುತವಾಗಿ ಮೂಡಿಬಂದಿದೆ. ಇದು ಅಪ್ಪಟ ಪ್ಯಾಮಿಲಿ ಸ್ಟೋರಿ, ಡಾ.ರಾಜ್ಕುಮಾರ್ ಅವರ ಸಿನಿಮಾಗಳನ್ನು ನೆನಪಿಸುತ್ತೆ, ರಚಿತಾರಾಮ್, ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ದೊಡ್ಡ ದೊಡ್ಡ ಕಲಾವಿದರೇ ಅಭಿನಯಿಸಿದ್ದಾರೆ ಎಂದು ಹೇಳಿದರು.
ನಿರ್ದೇಶಕ ನಾಗಶೇಖರ್ ಮಾತನಾಡಿ, ಶಿಡ್ಲಘಟ್ಟದಿಂದ ಸ್ವಿಟ್ಜರ್ಲ್ಯಾಂಡ್ ಹೀಗೆ ಅದ್ಭುತವಾದ ಲೊಕೇಶನ್ಗಳಲ್ಲಿ 72 ದಿನಗಳ ಕಾಲ ಚಿತ್ರೀಕರಿಸಿದ್ದೇವೆ, ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರವೀಗ ರಿರೆಕಾರ್ಡಿಂಗ್ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಚಿತ್ರದ ಫಸ್ಟ್ ಕಾಪಿ ಹೊರಬರಲಿದೆ ಎಂದರು.
ಚಿತ್ರ ಬಿಡುಗಡೆಗೂ ಮುನ್ನವೇ ಗೋಕುಲ್ ಪಿಲಂಸ್ ಚಿತ್ರವನ್ನು ಖರೀದಿ ಮಾಡಿದ್ದಾರೆ. ರಿಲೀಸ್ ಡೇಟ್ ಅನೌನ್ಸ್ ಮಾಡಲು ನಾವಂತೂ ರೆಡಿ ಇದ್ದೇವೆ. ಚಿತ್ರದಲ್ಲಿ 5 ಹಾಡುಗಳಿದ್ದು, ಹಾಡಿಗೆ ಲಹರಿ ಸಂಸ್ಥೆಯ ಅನುಮತಿ ಬೇಕಿದೆ, ಮಣ್ಣಿನ ಕಥೆ ಮಾಡಲು ಹೊರಟಾಗ ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ ಸಮಸ್ಯೆ ಕಣ್ಣಮುಂದೆ ಬಂತು, ಅಲ್ಲಿನ ಕಪ್ಪುಮಣ್ಣಿನ ಕಥೆಯನ್ನು ಚಿತ್ರದಲ್ಲಿ ಹೇಳಹೊರಟಿದ್ದೇವೆ, ಇದರಲ್ಲಿ ಎಲ್ಲವೂ ಹೊಸದಾಗಿರುತ್ತೆ. ನಿರ್ಮಾಪಕ ಕುಮಾರ್ ಅವರು ನೀಡಿದ ಸಹಕಾರದಿಂದ ಚಿತ್ರದ ಇಷ್ಟು ಅದ್ದೂರಿಯಾಗಿ ಬಂದಿದೆ. ಈಗಿನ ಕಾಲದ ಲವ್ಸ್ಟೋರಿ ಜೊತೆಗೆ ಒಂದು ಸರ್ ಪ್ರೈಸ್ ಕೂಡ ಚಿತ್ರದಲ್ಲಿದೆ ಎಂದರು.
ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ ಮೊದಲ ಬಾರಿಗೆ ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಮೊದಲ ಹಾಡು ರಿಲೀಸಾಗಿದೆ. ನಾಗಶೇಖರ್ ಅವರ ಪ್ಯಾಟ್ರನ್ ಅಲ್ಲದೆ ಇರುವ ಈ ಹಾಡಲ್ಲಿ ನಾನು, ರಚಿತಾರಾಮ್, ರಾಗಿಣಿ ದ್ವಿವೇದಿ ಅಭಿನಯಿಸಿದ್ದೇವೆ, ರಾಜ್ಯಾದ್ಯಂತ ಆಗಮಿಸಿರುವ ನಾಯಕರೆಲ್ಲರ ಸಮ್ಮುಖದಲ್ಲಿ ಈ ಹಾಡನ್ನು ರಿಲೀಸ್ ಮಾಡಿದ್ದೇವೆ ಎಂದು ಹೇಳಿದರು.
ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ, ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ.

