“ಮಾಯಾವಿ” ಚಿತ್ರದ ಹಾಡು,ಟೀಸರ್ ಬಿಡುಗಡೆ ಮಾಡಿದ ಶ್ರೀಗಳು
ಕನ್ನಡ ಚಿತ್ರರಂಗದಲ್ಲಿ ನೂತನ ಪ್ರತಿಭೆಗಳ ಆಗಮನ ಹೆಚ್ಚಾಗುತ್ತಿದೆ. ಈಗ ಆ ಸಾಲಿಗೆ ಕೋಟೆನಾಡಿನ ಹುಡುಗ ರಘು ರಾಮ್ “ಮಾಯಾವಿ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಸೇರ್ಪಡೆಯಾಗಿದ್ದಾರೆ. ನಾಯಕನಾಗಷ್ಟೇ ಅಲ್ಲದೆ ಚಿತ್ರ ನಿರ್ಮಾಣ ಕೂಡ ಮಾಡಿದ್ದಾರೆ.

ಶಂಕರ್ ಜಿ ನಿರ್ದೇಶಿಸಿರುವ ಚಿತ್ರದ ಟೀಸರ್ ಹಾಗೂ “ಆವರಿಸು” ಹಾಡಿನ ಅನಾವರಣವಾಯಿತು. ಶ್ರೀಶಾಂತವೀರ ಮಹಾಸ್ವಾಮಿಗಳು ಹಾಗೂ ಶ್ರೀಈಶ್ವರಾನಂದಾಪುರಿ ಮಹಾಸ್ವಾಮಿಗಳು ಟೀಸರ್ ಹಾಗೂ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ.ಮೂರ್ತಿ ಮತ್ತಿತರು ಇದ್ದರು
ನಿರ್ದೇಶಕ ಶಂಕರ್ ಮಾತನಾಡಿ ಈ ಹಿಂದೆ ಕೆಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದೇನೆ. ನಿರ್ದೇಶನಕನಾಗಿ ಮೊದಲ ಚಿತ್ರ. ಚಿತ್ರದುರ್ಗದಲ್ಲಿ ಕಥೆ ಕೇಳಿದ ಮಿತ್ರ ರಘುರಾಮ್ ಹಾಗೂ ಅವರ ಪತ್ನಿ ಅಕ್ಷತ ಚಿತ್ರ ನಿರ್ಮಾಣಕ್ಕೆ ಮುಂದಾದರು. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಚಿತ್ರದುರ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಚಿತ್ರಕ್ಕೆ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು

ನಾಯಕ ಹಾಗೂ ನಿರ್ಮಾಪಕ ರಘುರಾಮ್ ಮಾತನಾಡಿ “ಮಾಯಾವಿ” ಮೊದಲ ಚಿತ್ರ. ಚಿತ್ರ ನಿರ್ಮಾಣವಾಗಲು ಪ್ರಮುಖ ಕಾರಣ ಪತ್ನಿ ಡಾ.ಅಕ್ಷತ. ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಆನಂತರ ಚಿತ್ರಕ್ಕೆ ಚಾಲನೆ ದೊರೆಯಿತು. ಟೀಸರ್ ಹಾಗೂ “ಆವರಿಸು” ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಗಾಯಕ ವಿಜಯ್ ಪ್ರಕಾಶ್ ಈ ಹಾಡನ್ನು ಹಾಡಿದ್ದು, ಅಗಸ್ತ್ಯ ಸಂತೋಷ್ ಸಂಗೀತ ನೀಡಿದ್ದಾರೆ. ಆನಂದ್ ಕಮ್ಮಸಾಗರ ಬರೆದಿದ್ದಾರೆ ಎಂದರು
ನಾಯಕಿ ನಿಶ್ಚಿತ ಶೆಟ್ಟಿ ಮಾತನಾಡಿ ಮೂಲತಃ ಎಂಜಿನಿಯರ್. “ಶ್ರೀಜಗನ್ನಾಥದಾಸರು” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. “ಮಾಯಾವಿ” ಚಿತ್ರದಲ್ಲೂ ನನ್ನ ಪಾತ್ರ ಚೆನ್ನಾಗಿದೆ. ನಟನೆಯ ಜೊತೆಗೆ ತಂತ್ರಜ್ಞಳಾಗೂ ಕಾರ್ಯ ನಿರ್ವಹಿಸಿದ್ದೇನೆ ಎಂದು ತಿಳಿಸಿದರು.
ನಾಯಕ ರಘುರಾಮ್ ಪತ್ನಿ ಅಕ್ಷತ ಅವರು ಸಿನಿಮಾ ಆರಂಭವಾದ ಬಗ್ಗೆ ತಿಳಿಸಿ, ಎಲ್ಲರೂ “ಮಾಯಾವಿ” ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕೆಂದರು. ಕಾರ್ಯಕಾರಿ ನಿರ್ಮಾಪಕರಾದ ಮಹೇಶ್ವರಪ್ಪ, ಹಿರಿಯ ನಟ ಸುರೇಶ್ ಬಾಬು ಮುಂತಾದ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.

