ನಟ ವಿಜಯ್ ರಾಘವೇಂದ್ರ ದ್ವಿಪಾತ್ರದ ‘ರುದ್ರಾಭಿಷೇಕಂ’ ಮೊದಲ ಹಂತದ ಚಿತ್ರೀಕರಣ ಮುಕ್ತಾಯ
ನಟ ವಿಜಯ ರಾಘವೇಂದ್ರ ತಂದೆ, ಮಗನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ ರುದ್ರಾಭಿಷೇಕಂ. ಚಿತ್ರದಲ್ಲಿ ಮೊದಲ ಬಾರಿಗೆ ಒಬ್ಬ ವೀರಗಾಸೆ ಕಲಾವಿದನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ನಾಡಿನ ಸಾಂಸ್ಕೃತಿಕ ಹಿನ್ನೆಲೆ, ಇತಿಹಾಸ, ಅದರ ವೈಭವವನ್ನು ಕಮರ್ಷಿಯಲ್ ಆಗಿ ಹೇಳಲು ನಿರ್ದೇಶಕ ವಸಂತ್ ಕುಮಾರ್ ಪ್ರಯತ್ನಿಸಿದ್ದಾರೆ. ದೇವನಹಳ್ಳಿ ಸುತ್ತಮುತ್ತ ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸಲಾಗಿದೆ.
ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ. ಫೆಬ್ರವರಿ ಎರಡನೇ ವಾರದಿಂದ 2ನೇ ಹಂತದ ಶೂಟಿಂಗ್ ಪ್ರಾರಂಭಿಸಲಾಗುವುದು. ಈ ಹಂತದಲ್ಲಿ ಮಾತಿನಭಾಗ ಹಾಗೂ ಎರಡು ಹಾಡುಗಳನ್ನು ದೇವನಹಳ್ಳಿ, ವಿಜಯಪುರದಲ್ಲಿ ಚಿತ್ರೀಕರಿಸಿ, ಉಳಿದೆರಡು ಹಾಡುಗಳನ್ನು ಮಲ್ಪೆ, ಮಂಗಳೂರು ಹಾಗೂ ಆಗುಂಬೆ ಸುತ್ತಮುತ್ತ ಚಿತ್ರೀಕರಿಸುವ ಯೋಜನೆಯಿದೆ ಎಂದು ನಿರ್ದೇಶಕರು ಹೇಳಿದ್ದಾರೆ
ನಿರ್ದೇಶಕ ವಸಂತ್ ಕುಮಾರ್ ಚಿತ್ರದಲ್ಲಿ ಒಬ್ಬ ತತ್ವಜ್ಞಾನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಕ್ಯಾರಿ ಆಗೋ ಪಾತ್ರವಿದು.

ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ಒಂದು ಕಲೆಯನ್ನು ಈ ಚಿತ್ರದ ಮೂಲಕ ಹೇಳಲಾಗಿದೆ.ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರದಲ್ಲಿ ಹೇಳಲಾಗಿದೆ.
ನಿರ್ದೇಶಕರ ಸ್ನೇಹಿತರಾದ ಜಯರಾಮಣ್ಣ, ಶಿವರಾಮ್, ಚಿದಾನಂದ್, ಹಡಪದ, ರಮೇಶ್, ಮಂಜುನಾಥ್, ಮುನಿಕೃಷ್ಣಪ್ಪ, ರವಿ, ಅಶ್ವಥ್, ಆನಂದ್ ಸೇರಿ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ರುದ್ರಾಭಿಷೇಕಂ ಚಿತ್ರದಲ್ಲಿ ಬಲ ರಾಜವಾಡಿ ಊರ ಗೌಡನಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

