“ವರ್ಣ” ಟೀಸರ್ ಬಿಡುಗಡೆ: ಕುತೂಹಲ ಹೆಚ್ಚಳ
ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟ ಅರ್ಜುನ್ ಯೋಗಿ ನಾಯಕನಾಗಿ ನಟಿಸಿರುವ, ದೇವ ಶರ್ಮ ನಿರ್ದೇಶಿಸಿರುವ ಹಾಗೂ ಮಲ್ಲಿನೇನಿ ನವೀನ್ ಚೌಧರಿ ನಿರ್ಮಿಸಿರುವ “ವರ್ಣ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದ್ದು ನಿರ್ಮಾಪಕರ ಪುತ್ರ ವರ್ಷನ್ ಚೌಧರಿ ಟ್ರೇಲರ್ ಅನಾವರಣ ಮಾಡಿದ್ದು ವಿಶೇಷವಾಗಿತ್ತು

ನಿರ್ದೇಶಕ ದೇವ ಶರ್ಮ ಮಾತನಾಡಿ ಮೊದಲು ಕಿರುಚಿತ್ರ ಮಾಡಲು ಹೊರಟಿದ್ದೆವು. ಆದರೆ ಕಥೆ ಕೇಳಿದ ನಿರ್ಮಾಪಕ ಮಲ್ಲೇನೇನಿ ನವೀನ್ ಚೌಧರಿ, ಸಿನಿಮಾ ನಿರ್ಮಾಣ ಮಾಡೋಣ ಎಂದರು. ನಾಯಕ ಅರ್ಜುನ್ ಯೋಗಿ, ನಾಯಕಿ ಭವ್ಯ ಗೌಡ, ವಿಲನ್ ಪಾತ್ರದಲ್ಲಿ ಲಂಕೇಶ್ ರಾವಣ ನಟಿಸಿದ್ದಾರೆ. ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಗೌರಿ ವೆಂಕಟೇಶ್ ಛಾಯಾಗ್ರಹಣ, ಸುಜಿತ್ ನಾಯಕ್ ಸಂಕಲನ, ಚಿನ್ನಯ್ಯ ಮಾಸ್ಟರ್ – ಸಾಗರ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ಹೈಟ್ ಮಂಜು, ಗೀತಾ ನೃತ್ಯ ನಿರ್ದೇಶನವಿರುವ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ ಎಂದರು
ನಿರ್ಮಾಪಕ ಮಲ್ಲೇನೇನಿ ನವೀನ್ ಚೌಧರಿ ಮಾತನಾಡಿ ಪಾವಗಡದವನುಮಎಲ್ಲಾ ಜವಾಬ್ದಾರಿಯನ್ನು ನಿರ್ದೇಶಕ ದೇವ ಶರ್ಮ ಅವರಿಗೆ ವಹಿಸಿದ್ದೇನೆ. ಚಿತ್ರ ಚೆನ್ನಾಗಿ ಬರಬೇಕೆಂದಷ್ಟೇ ಹೇಳಿದ್ದೇನೆ. “ವರ್ಣ” ಎಲ್ಲರಿಗೂ ಹಿಡಿಸುವ ಚಿತ್ರವಾಗುವ ಭರವಸೆಯಿದೆ ಎಂದು ತಿಳಿಸಿದರು.

ನಾಯಕ ಅರ್ಜುನ್ ಯೋಗಿ ಮಾಹಿತಿ ನೀಡಿ, ಹತ್ತು ವರ್ಷಗಳ ಹಿಂದೆ ತೆರೆಕಂಡ “ಸಂಜೆಯಲ್ಲಿ ಅರಳಿದ ಹೂವು” ನಾಯಕನಾಗಿ ನಟಿಸಿದ ಮೊದಲ ಚಿತ್ರ. ಐದನೇ ಚಿತ್ರ. ನಿರ್ದೇಶಕ ದೇವ ಶರ್ಮ ನಾಲ್ಕು ವರ್ಷಗಳ ಹಿಂದೆ ಚಿತ್ರದ ಕಥೆ ಹೇಳಿದ್ದರು. ಕಾರಣಾಂತರದಿಂದ ಚಿತ್ರ ಆಗ ಆರಂಭವಾಗಿರಲಿಲ್ಲ. ಕಳೆದ ವರ್ಷದ ನವೆಂಬರ್ನಲ್ಲಿ ಚಿತ್ರೀಕರಣ ಆರಂಭವಾಯಿತು. ಸರಿಯಾಗಿ ಒಂದು ವರ್ಷಕ್ಕೆ ನಮ್ಮ ಚಿತ್ರ ಬಿಡುಗಡೆ ಹಂತಕ್ಕೆ ಬಂದು ನಿಂತಿದೆ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಚಿತ್ರದಲ್ಲಿ ಪಾತ್ರದ ಹೆಸರು “ವರ್ಣ”. ತಪ್ಪನ್ನು ಸಹಿಸದ, ತಪ್ಪು ಮಾಡಿದವರನ್ನು ಬಿಡದ ಹಳ್ಳಿ ಹುಡುಗನಾಗಿ ಅಭಿನಯಿಸಿದ್ದೇನೆ. ಇದೊಂದು ಹಳ್ಳಿ ಸೊಗಡಿನ ಕಥೆ ಎಂದು ಹೇಳಿದರು.
ತಮ್ಮ ಪಾತ್ರದ ಬಗ್ಗೆ ನಾಯಕಿ ಭವ್ಯಗೌಡ ಹೇಳಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ರಮೇಶ್ ಕೃಷ್ಣ ಮಾಹಿತಿ ನೀಡಿದರು. ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಲಂಕೇಶ್ ರಾವಣ, ನಟಿಯರಾದ ಅಮೃತ, ಶಿವಾನಿ, ನಟರಾದ ಪ್ರಣಯ್ ಮೂರ್ತಿ, ಮಂಡ್ಯ ಸಿದ್ದು, ಛಾಯಾಗ್ರಾಹಕ ಗೌರಿ ವೆಂಕಟೇಶ್, ನೃತ್ಯ ನಿರ್ದೇಶಕರಾದ ಹೈಟ್ ಮಂಜು, ಗೀತಾ ಹಾಗೂ ಸಾಹಸ ನಿರ್ದೇಶಕ ಚಿನ್ನಯ್ಯ ಮುಂತಾದವರು ” ವರ್ಣ” ಚಿತ್ರದ ಕುರಿತು ಮಾತನಾಡಿದರು.

